ಬಳ್ಳಾರಿ, ಜೂ.10: ಕಬ್ಬಿಣದ ಅದಿರಿನ ಅಕ್ರಮ ದಾಸ್ತಾನು ಹಾಗೂ ಸರ್ಕಾರಿ ಕೆರೆಯ ಮಣ್ಣಿನ ಅಕ್ರಮ ಸಾಗಣೆಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಉದಯರವಿ ಅವರನ್ನು ಅಮಾನತುಗೊಳಿಸಲಾಗಿದೆ.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರು (ಐಜಿಪಿ) ಜೂನ್ 6ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ. ಸಲೀಂ ಅವರು ಜೂನ್ 7ರಂದು ಸ್ಥಿರೀಕರಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರಡು ದೋಷಾರೋಪಣೆ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಮಗ್ರ ವಿಚಾರಣಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ.
ಅಮಾನತಿಗೆ ಕಾರಣವೇನು?
ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಿರುಗುಪ್ಪ ಉಪವಿಭಾಗದ ಡಿವೈಎಸ್ಪಿ ಸಲ್ಲಿಸಿದ ತನಿಖಾ ವರದಿಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಮಾರ್ಚ್ 22ರಂದು ಬಳ್ಳಾರಿ ಗ್ರಾಮೀಣ ಠಾಣಾ ವ್ಯಾಪ್ತಿಯ ಹಲಕುಂದಿ ಸಮೀಪ ಕಾನೂನುಬಾಹಿರವಾಗಿ ಕಬ್ಬಿಣದ ಅದಿರು ಸಂಗ್ರಹಿಸಲಾಗಿದ್ದರೂ, ವಿಷಯ ತಿಳಿದಿದ್ದ ಇನ್ಸ್ಪೆಕ್ಟರ್ ಉದಯರವಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.
ನಂತರ ಏಪ್ರಿಲ್ 3ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದೂರು ನೀಡಿದ ಬಳಿಕ ಮಾತ್ರ ಅವರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಆದರೆ ಈ ವಿಷಯವನ್ನು ಠಾಣೆಯ ದಿನಚರಿಯಲ್ಲಿ ದಾಖಲಿಸದೇ ಹಾಗೂ ಮೇಲಾಧಿಕಾರಿಗಳ ಗಮನಕ್ಕೂ ತರದೇ ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ.
ಅಧಿಕಾರದ ದುರುಪಯೋಗ ಮಾಡಿಕೊಂಡು ಅದಿರು ದಂಧೆಕೋರರಿಗೆ ಅಕ್ರಮ ದಾಸ್ತಾನು ನಡೆಸಲು ಅವಕಾಶ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಣ್ಣು ಸಾಗಣೆಗೆ ಲಂಚ ಪಡೆದ ಆರೋಪ
ಕೊಳಗಲ್ಲು ಗ್ರಾಮದ ಸರ್ಕಾರಿ ಕೆರೆಯಿಂದ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣದಲ್ಲಿಯೂ ಉದಯರವಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಿಸಲು ಟ್ರ್ಯಾಕ್ಟರ್ ಹಾಗೂ ಟ್ಯಾಲಿ ಮಾಲೀಕರಿಂದ ಹಣ ವಸೂಲಿ ಮಾಡಿರುವುದಾಗಿ ಸಾಕ್ಷಿದಾರರು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಇಟ್ಟಿಗೆ ಭಟ್ಟಿ ಮಾಲೀಕರಿಂದಲೂ ಹಣ ಪಡೆದು ಸರ್ಕಾರಿ ಕೆರೆಯ ಮಣ್ಣಿನ ಅಕ್ರಮ ಲೂಟಿಗೆ ಕುಮ್ಮಕ್ಕು ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಎಲ್ಲಾ ಆರೋಪಗಳು ಇಲಾಖೆಯ ಶಿಸ್ತು ಮತ್ತು ಪೊಲೀಸ್ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ತಂದಿರುವುದರಿಂದ ಅಮಾನತು ಕ್ರಮ ಅನಿವಾರ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಕರಣದ ಇಲಾಖಾ ತನಿಖೆ ಮುಂದುವರಿದಿದ್ದು, ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ
