ಜಮಖಂಡಿ, ಮೇ 28 : ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವೈಮನಸ್ಸು ಹೆಚ್ಚಾಗುತ್ತಿದ್ದು, ಸಮಾಜದಲ್ಲಿ ಅಸಮಾನತೆ ಹಾಗೂ ಕೀಳರಿಮೆ ಭಾವನೆಗಳು ವೃದ್ಧಿಯಾಗುತ್ತಿವೆ. ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಸಂದೇಶವನ್ನು ಸಮಾಜಕ್ಕೆ ಸಾರುವ ಉದ್ದೇಶದಿಂದ ಗೋಠೆ ಗ್ರಾಮದಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತಿದೆ ಎಂದು ಪ್ರಜಾ ಪರಿವರ್ತನೆ ವೇದಿಕೆಯ ಕಾರ್ಯದರ್ಶಿ ಗೋಪಿನಾಥ ಮೀಸಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಖಂಡಿಯ ಡಾ. ಬಿ.ಆರ್. ಅಂಬೇಡ್ಕರ್ ಬುದ್ಧ ವಿಹಾರ ನಿರ್ಮಾಣ ಸಮಿತಿ, ಗೋಠೆಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳ ಹಾಗೂ ಶ್ರೀ ಕಾಶಿಲಿಂಗೇಶ್ವರ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ ಮೇ 31ರಂದು ಗೋಠೆ ಗ್ರಾಮದಲ್ಲಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಆಮಂತ್ರಣ ಪತ್ರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಹೆಸರನ್ನಷ್ಟೇ ಸೇರಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಗುಡಗುಂಟಿ ಅವರು ಶಾಸಕರಾದ ಕೆಲವೇ ದಿನಗಳಲ್ಲಿ “ಸಮಾನತೆಯನ್ನು ತೆಗೆದುಹಾಕಲಾಗುವುದು” ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಅವರು ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಭಾವನೆ ಮೂಡಿದೆ. ಆದ್ದರಿಂದ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷ ಹುಟ್ಟುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಅಂಬೇಡ್ಕರ್ ಅವರ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮಕ್ಕೆ ಮೈಸೂರಿನ ಉರಲಿಂಗ ಪೆದ್ದಿ ಮಠದ ಪೂಜ್ಯ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅಂಬೇಡ್ಕರವಾದಿ ಚಿಂತಕರಾದ ಬೆಂಗಳೂರಿನ ಬಿ. ಗೋಪಾಲ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಪಂಚಲೋಹದ ಮೂರ್ತಿಯನ್ನು ಅನಾವರಣಗೊಳಿಸಲಿದ್ದು, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ, ಬೀಳಗಿ ಶಾಸಕ ಜೆ.ಟಿ. ಪಾಟೀಲ್, ಕುಡಚಿ ಶಾಸಕ ಮಹೇಶ್ ತಮ್ಮಣ್ಣವರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಿದ್ದಾರ್ಥ ಡಿ. ಚಿಮ್ಮಾ ಇದ್ಲಾಯಿ ಅವರ ತಂಡದಿಂದ ಭೀಮ ಕ್ರಾಂತಿಗೀತೆಗಳ ಸಂಗೀತ ಕಾರ್ಯಕ್ರಮವೂ ನಡೆಯಲಿದೆ ಎಂದು ಗೋಪಿನಾಥ ಮೀಸಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀನಾಥ ಎಸ್. ಬಸವರಾಜ, ಚನ್ನಬಸು ಗುಣದಾಳ, ಶರಣಪ್ಪ ಹೊಸಬಲಿ, ಆನಂದ ಎಸ್. ಬಡಿಗೇರ, ಗೋಪಾಲ ಜುಮ್ಮನಾಳ, ಎಸ್.ಕೆ. ಬಸವರಾಜ ಹಾಗೂ ಭೀಮರಾವ್ ದೊಡ್ಡಮನಿ ಉಪಸ್ಥಿತರಿದ್ದರು.
