ಮುದ್ದೇಬಿಹಾಳ: ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮುದ್ದೇಬಿಹಾಳ ತಾಲೂಕಿನ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ಮುದ್ದೇಬಿಹಾಳ ತಾಲೂಕನ್ನು ಅಧಿಕೃತವಾಗಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದಿಂದ ತಾಲೂಕಿನ ರೈತರು ಹಾಗೂ ಕೃಷಿ ಕಾರ್ಮಿಕರಲ್ಲಿ ಸಮಾಧಾನದ ವಾತಾವರಣ ನಿರ್ಮಾಣವಾಗಿದೆ. ಈ ಪ್ರಯತ್ನದಲ್ಲಿ ಶಾಸಕ ನಾಡಗೌಡ ಅವರದು ಬಹಳಷ್ಟಿದೆ ಎಂದು ಗಣ್ಯ ಉದ್ಯಮಿದಾರ ಸಿ.ಪಿಸಜ್ಜನ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಸಂತಸ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿತ್ತು. ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ರೈತರು ಹಾಗೂ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಶಾಸಕ ನಾಡಗೌಡ ಅವರು ಒತ್ತಾಯಿಸಿದ್ದರು.
ರೈತರ ಗಂಭೀರತೆಯನ್ನು ಅರಿತ ಶಾಸಕ ಸಿ.ಎಸ್. ಅಪ್ಪಾಜಿ ನಾಡಗೌಡ ಅವರು ಕಳೆದ ಹಲವು ದಿನಗಳಿಂದ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನ ನಡೆಸಿದ್ದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಮುದ್ದೇಬಿಹಾಳ ತಾಲೂಕಿನ ಮಳೆ ಕೊರತೆ, ಕೃಷಿ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಕುರಿತು ಸಮಗ್ರ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತಂದಿದ್ದರು. ಇದರ ಫಲವಾಗಿ ಇದೀಗ ಸರ್ಕಾರ ಮುದ್ದೇಬಿಹಾಳ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿದೆ ಎಂದು ಅವರು ಹೇಳಿದರು.
ಬರಪೀಡಿತ ತಾಲೂಕು ಘೋಷಣೆಯಿಂದ ಸರ್ಕಾರದ ನಿಯಮಾನುಸಾರ ರೈತರಿಗೆ ವಿವಿಧ ಪರಿಹಾರ ಕ್ರಮಗಳು ಹಾಗೂ ಬರ ನಿರ್ವಹಣಾ ಸೌಲಭ್ಯಗಳು ದೊರೆಯುವ ನಿರೀಕ್ಷೆಯಿದೆ. ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳಿಗೆ ನೆರವು, ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚುವರಿ ಉದ್ಯೋಗಾವಕಾಶ, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಕೆ ಸೇರಿದಂತೆ ಬರ ನಿರ್ವಹಣೆಗೆ ಸಂಬಂಧಿಸಿದ ಹಲವು ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಅವಕಾಶ ದೊರೆಯಲಿದೆ.
ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ಕಳೆದ ಹಲವು ದಿನಗಳಿಂದ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದ ರೈತರಲ್ಲಿ ಇದೀಗ ಆಶಾಭಾವನೆ ಮೂಡಿದೆ. ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದ್ದ ರೈತರಿಗೆ ಸರ್ಕಾರದ ಪರಿಹಾರ ಕ್ರಮಗಳು ತಲುಪುವಂತಾಗಬೇಕು ಎಂಬುದು ರೈತರ ಪ್ರಮುಖ ನಿರೀಕ್ಷೆಯಾಗಿದೆ.
ತಾಳಿಕೋಟಿಗೂ ಬರ ಘೋಷಣೆಗೆ ಪ್ರಯತ್ನ: ಮುದ್ದೇಬಿಹಾಳ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ತಾಳಿಕೋಟಿ ತಾಲೂಕನ್ನೂ ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮುಂದುವರಿದಿದೆ. ಇದರಲ್ಲಿ ಶಾಸಕ ಅಪ್ಪಾಜಿ ನಾಡಗೌಡ
ಸತತ ಪ್ರಯತ್ನದಲ್ಲಿದ್ದಾರೆ
ತಾಳಿಕೋಟಿ ತಾಲೂಕಿನಲ್ಲಿಯೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಅಲ್ಲಿನ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು ಬರ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಮೆಹಬೂಬ ಗೋಳಸಂಗಿ, ಸಂಗಣ್ಣ ಬಿರಾದಾರ(ಜಿಟಿಸಿ), ಪ್ರಭುರಾಜ ಕಲಬುರಗಿ, ಸಿಕಂದರ್ ಜಾನ್ವೆಕರ್, ಸಂತೋಷ ನಯ್ಕೋಡಿ, ಯಲ್ಲಪ್ಪ ನಾಯಕಮಕ್ಕಳ, ಗೋಪಿ ಮಡಿವಾಳರ, ರಫೀಕ್ ಶಿರೋಳ ಸೇರಿದಂತೆ ಇತರರಿದ್ದರು.