ಬಳ್ಳಾರಿ, ಏ.25:.: ಆರ್ ವೈ ಎಂ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ ವಿಭಾಗದ ವತಿಯಿಂದ ರಾಷ್ಟ್ರಮಟ್ಟದ ‘ಅಸ್ತ್ರ ಮ್ಯಾನೇಜ್ಮೆಂಟ್ ಫೆಸ್ಟ್–2026’ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲಾಯಿತು.
ವೀರಶೈವ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ನಾಯಕತ್ವ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಉದ್ದೇಶವನ್ನು ಹೊಂದಿತ್ತು.
ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಡಾ. ಅರವಿಂದ್ ಪಟೇಲ್ ಉದ್ಘಾಟಿಸಿ ಮಾತನಾಡಿ, ಇಂತಹ ಮ್ಯಾನೇಜ್ಮೆಂಟ್ ಫೆಸ್ಟ್ಗಳು ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆಯಾಗುತ್ತವೆ. ಸ್ಪರ್ಧೆಗಳ ಮೂಲಕ ಪಡೆಯುವ ಅನುಭವವು ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಸಂಸ್ಥೆ ಇಂತಹ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಜಾನೇಕುಂಟೆ ಬಸವರಾಜ್, ಪ್ರಾಚಾರ್ಯ ಡಾ. ಹೆಚ್. ಮಹಾಬಲೇಶ್ವರ್, ಉಪಪ್ರಾಚಾರ್ಯ ಡಾ. ಸವಿತಾ ಸೋನಾಲಿ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥ ಡಾ. ಎ. ತಿಮ್ಮನಗೌಡ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ವಿಶೇಷ ಅತಿಥಿಗಳಾಗಿ ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ನಿರ್ದೇಶಕರಾದ ನವೀನ್ ಲೋಕೆರೆ ಮತ್ತು ಮುರಳಿ ಭಾಗವಹಿಸಿ ತಮ್ಮ ಉದ್ಯಮ ಅನುಭವಗಳನ್ನು ಹಂಚಿಕೊಂಡರು.
ಉದ್ಘಾಟನೆಯ ಬಳಿಕ ‘ಕೌಟಿಲ್ಯ’, ‘ಸಮರ್ಥ’, ‘ಸವ್ಯಸಾಚಿ’, ‘ವಿವೇಚನ’, ‘ನಿರ್ಗುಣ’ ಹಾಗೂ ‘ರಂಗಕ್ಷೇತ್ರ’ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 40ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬೆಳಿಗ್ಗೆಯಿಂದ ಸಂಜೆವರೆಗೆ ನಡೆದ ಈ ಫೆಸ್ಟ್ ವಿದ್ಯಾರ್ಥಿಗಳಿಗೆ ಹೊಸ ಅನುಭವ ನೀಡಿದ್ದು, ಅವರ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾದ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು.