ಮೈಸೂರಿಂದ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೆ ಬಿಡದಿಯಿಂದ ಮುಂದೆ ಬಂದು ಬೆಂಗಳೂರು ತಲುಪುತ್ತಿದ್ದರು. ಆದ್ರೆ, ಇದೀಗ ಇದಕ್ಕೆ ಹೆದ್ದಾರಿ ಪ್ರಾಧಿಕಾರವು ಸರ್ವಿಸ್ ರಸ್ತೆಯನ್ನೇ ಬಂದ್ ಮಾಡಿದೆ. ಹೀಗಾಗಿ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಟೋಲ್ ಪಾವತಿಸಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನು ರಾಷ್ಟ್ರೀಯ ಹೆದ್ದಾರಿಯ ಕ್ರಮಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಚನಾ ಫಲಕವನ್ನೂ ಅಳವಡಿಸದೇ ಏಕಾಏಕಿ ಎಕ್ಸಿಟ್ ರಸ್ತೆಯನ್ನು ಬಂದ್ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗುವುದಕ್ಕೂ ದುಬಾರಿ ಟೋಲ್ ಕಟ್ಟಬೇಕಾ ಎಂದು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಟೋಲ್ ಶುಲ್ಕ ಚಾರವಾಗಿ ಸಾಕಷ್ಟು ಅಡೆತಡೆಗಳು ಎದುರಾಗಿದ್ದವು. ಸರ್ವಿಸ್ ರಸ್ತೆ ಪೂರ್ಣಗೊಳಿಸದೆ ಟೋಲ್ ವಿಧಿಸಬಾರದೆಂದು ವಿವಿಧ ಸಂಘಟನೆಗಳು ಮಾತ್ರವಲ್ಲದೆ ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಇದರ ನಡುವೆಯೂ ಟೋಲ್ ಶುಲ್ಕ ಸಂಗ್ರಹಣೆ ಆರಂಭವಾದ ಬಳಿಕ ಮೂರು ಬಾರಿ ಪರಿಷ್ಕರಣೆಗೆ ಒಳಪಟ್ಟಿದೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ 2023 ಜು.1 ರಿಂದ ಪೂರ್ಣ ಪ್ರಮಾಣದ ಟೋಲ್ ಸಂಗ್ರಹಣೆ ಆರಂಭವಾಗಿತ್ತು. ರಾಜ್ಯದಲ್ಲಿರುವ ಬೇರೆ ರಾಷ್ಟ್ರೀಯ ಹೆದ್ದಾರಿಗಳಿಗೆ ಹೋಲಿಕೆ ಮಾಡಿದಲ್ಲಿ ಬೆಂಗಳೂರು – ಮೈಸೂರು ನಡುವಿನ ಎಕ್ಸ್ ಪ್ರೆಸ್ ವೇ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಕಣ್ಣಿಣಿಕೆ – ಶೇಷಗಿರಿಹಳ್ಳಿ ಟೋಲ್ ನಲ್ಲಿ 278.91 ಕೋಟಿ ರೂ. ಸಂಗ್ರವಾಗಿತ್ತು. ಇನ್ನು 2024-25ನೇ ಸಾಲಿನಲ್ಲಿ 167.32 ಕೋಟಿ ರು. ಟೋಲ್ ಶುಲ್ಕ ವಸೂಲಿಯಾಗಿತ್ತು.