ಬಾಗಲಕೋಟೆ : ಸೆಪ್ಟೆಂಬರ ೧೫ (ಕರ್ನಾಟಕ ವಾರ್ತೆ) : ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಆಶಯವಾದ ಸೌಹಾರ್ದತೆ, ಸಮಾನತೆ, ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯುವಜನರಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ ಹೇಳಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾನ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ೧೯ನೇ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ಸಂಸತ್ತಿಗೆ ಚಾಲನೆ ನೀಡಿ ಮಾತನಾಡಿದ ಅವರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ಗೌರವಿಸುವುದರೊಂದಿಗೆ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಯುವ ಸಂಸತ್ಗಳ ಮೂಲಕ ಸಂವಿಧಾನ, ಮೂಲಭೂತ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ
ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗದ ಕಾರ್ಯವೈಖರಿ ಕುರಿತು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಲೋಕಸಭೆ, ರಾಜ್ಯ ಸಭೆ, ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ನಡೆಯುವ ಕಲಾಪಗಳು, ಚರ್ಚೆಗಳು ಮತ್ತು ಕಾನೂನು ರೂಪಿಸುವ ಪ್ರಕ್ರಿಯೆಗಳ ಬಗ್ಗೆ ಯುವಕರು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸುವುದು ಪ್ರಜಾಪ್ರಭುತ್ವದ ಪ್ರಮುಖ ಉದ್ದೇಶವಾಗಿದೆ ಎಂದರು. ಯುವಜನರನ್ನು ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತ ಜೋಡೋ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ ಸಂವಿಧಾನ ನೀಡಿರುವ ಹಕ್ಕುಗೊಳ ಜೊತೆ ಕರ್ತವ್ಯವಗಳ ಬಗ್ಗೆಯೂ ಅರಿವು ಮೂಡಬೇಕು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಲವು ಮೂಲಭೂತ ಹಕ್ಕುಗಳನ್ನು ನೀಡಿದೆ. ಸಮಾನತೆ, ಸ್ವಾತಂತ್ರ್ಯ, ಶಿಕ್ಷಣ, ಅಬಿವೃದ್ದಿ ಸೇರಿದಂತೆ ಸಂವಿಧಾನಾತ್ಮಕ ಹಕ್ಕುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅವುಗಳನ್ನು ಪಡೆಯುವುದು ಎಷ್ಟು ಮುಖ್ಯವೋ ಅದೇ ರೀತಿಯಲ್ಲಿ ಸಂವಿಧಾನ ನಮಗೆ ವಹಿಸಿರುವ ಕರ್ತವ್ಯಗಳ ಬಗ್ಗೆಯೂ ಅರಿವು ಅಗತ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ ಮೇಟಿ ಮಾತನಾಡಿ ಸಂವಿಧಾನದ ಆಶಯ ಕೇವಲ ಕಾನೂನು ಪುಸ್ತಕಗಳಲ್ಲಿ ಉಳಿಯದೇ, ಪ್ರತಿಯೊಬ್ಬರ ಜೀವನದಲ್ಲಿ ಮತ್ತು ಸಾಮಾಜಿಕ ನಡವಳಿಕೆಯಲ್ಲಿ ಅಳವಡಿಕೆಯಾಗಬೇಕು. ಜಾತಿ, ಧರ್ಮ, ಭಾಷೆ, ಲಿಂಗ, ಆರ್ಥಿಕ ಸ್ಥಿತಿ ಸೇರಿದಂತೆ ಯಾವುದೇ ಆಧಾರದ ಮೇಲೆ ವ್ಯಕ್ತಿಯನ್ನು ಮೇಲು-ಕೀಳು ಎಂದು ನೋಡುವ ಮನೋಭಾವನೆ ದೂರವಾಗಬೇಕು. ಪರಸ್ಪರ ಗೌರವ, ಸಹಬಾಳ್ವೆ, ಸಮಾನತೆ ಮತ್ತು ಸಹೋದರತ್ವದ ಮೌಲ್ಯಗಳು ಸಮಾಜದಲ್ಲಿ ಬಲಗೊಳ್ಳಬೇಕು ಎಂದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಕಟಗೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ಈರಣ್ಣ ಕುಡಕಿ ಅವರು ಪ್ರಜಾಪ್ರಭುತ್ವ ಕುರಿತು ವಿವರವಾಗಿ ತಿಳಿಸಿಕೊಟ್ಟರು. ಶಿರೂರಿನ ಡಾ.ಬಸಲಿಂಗ ಶ್ರೀಗಳು ದಿವ್ಯ ಸಾನಿದ್ಯ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಸಚಿವ ವಿಜಯಾನಂದ ಕಾಶಪ್ಪನವರ ಹೂ ಮಾಲೆ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾದ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಗಜಾನನ ಬಾಲೆ, ಉಪ ವಿಭಾಗಾಧಿಕಾರಿ ಕ್ಯಾಪ್ಟನ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.