ಬಳ್ಳಾರಿ, ಏಪ್ರಿಲ್ 22:.. ಕೇಂದ್ರ ಸರ್ಕಾರ ಮಹಿಳೆಯರಿಗೆ 33% ಮೀಸಲಾತಿ ನೀಡುವ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಂಗಮ್ ಸರ್ಕಲ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತರು, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣ ಜಾರಿಗೆ ತರಬೇಕೆಂದು ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಮಹಿಳೆಯರ ರಾಜಕೀಯ ಹಕ್ಕುಗಳನ್ನು ವಿಳಂಬಗೊಳಿಸುತ್ತಿದೆ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು. ಮೊದಲನೆಯದಾಗಿ, ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಪೂರ್ವಭಾವಿ ಷರತ್ತುಗಳಿಲ್ಲದೆ ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಎರಡನೆಯದಾಗಿ, ಮಹಿಳಾ ಮೀಸಲಾತಿ ಮಸೂದೆಯೊಳಗೆ ಇತರ ಹಿಂದುಳಿದ ವರ್ಗಗಳಿಗೆ (OBC) ಉಪ ಮೀಸಲಾತಿಯನ್ನು ಸೇರಿಸಬೇಕು, ಇದರಿಂದ ಸಾಮಾಜಿಕ ನ್ಯಾಯ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮೂರನೆಯದಾಗಿ, 2026ರ ಜಾತಿ ಜನಗಣತಿಯ ನಿಖರ ದತ್ತಾಂಶದ ಆಧಾರದ ಮೇಲೆ ಕ್ಷೇತ್ರಗಳ ಮಿತಿ ನಿರ್ಣಯ ಮಾಡಬೇಕು ಎಂದು ಒತ್ತಾಯಿಸಿದರು. ನಿಖರ ದತ್ತಾಂಶದ ಆಧಾರದಲ್ಲೇ ನ್ಯಾಯಯುತ ಪ್ರಾತಿನಿಧ್ಯ ದೊರೆಯುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಮಹಿಳೆಯರು, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಮ್ ಪ್ರಶಾಂತ್, ವಖ್ಫ್ ಬೋರ್ಡ್ ಚೆರ್ಮೆನ್ ಹುಮಯೂನ್ ಖಾನ್, ಮಹಿಳಾ ಜಿಲ್ಲಾಧ್ಯಕ್ಷೆ ಎಂ.ಎಸ್ ಮಂಜುಳಾ, ಕಾಂಗ್ರೆಸ್ ಮುಖಂಡರಾದ ಕನೆಕಲ್ ಮಾಬೂಸಾಬ್, ಎಲ್ ಮಾರೆಣ್ಣಾ, ಮಾನಯ್ಯ, ನಾಗು, ಬಿ.ರುದ್ರಪ್ಪ, ಪರ್ವೀನ್ ಬಾನು,ಯಶೋಧ, ಶಮಿಮ್ ಜಕ್ಲಿ, ಗೌಸಿಯ, ಆಶಾಲತಾ, ಸುನೀತಾ, ಪದ್ಮಾ, ಸೇರಿದಂತೆ ಮಹಿಳಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.