ಬಳ್ಳಾರಿ, ಜೂ.1: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಕೊರ್ಲಗುಂದಿ ಗ್ರಾಮದ ಪಿ. ಪ್ರಕಾಶ್ ರೆಡ್ಡಿ ಅವರನ್ನು ರಾಜ್ಯ ಘಟಕ ನೇಮಕ ಮಾಡಿದೆ.
ಪಿ. ಪ್ರಕಾಶ್ ರೆಡ್ಡಿ ಅವರು ಈ ಹಿಂದೆ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ, ಬಳ್ಳಾರಿ ತಾಲೂಕು ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸುವಲ್ಲಿ ಸೇವೆ ಸಲ್ಲಿಸಿದ್ದರು.
ಈ ಹಿಂದೆ ಜಿಲ್ಲಾ ಅಧ್ಯಕ್ಷರಾಗಿದ್ದ ಕೊಳಗಲ್ ಗ್ರಾಮದ ವಿ. ಯುಗಂಧರ್ ಅವರು ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ, ಮೇ 23, 2026ರಂದು ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರು ಸರ್ವಾನುಮತದಿಂದ ಪಿ. ಪ್ರಕಾಶ್ ರೆಡ್ಡಿ ಅವರ ಹೆಸರನ್ನು ಆಯ್ಕೆ ಮಾಡಿದರು. ಈ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ ಅವರು ರಾಜ್ಯ ಸಮಿತಿಗೆ ಕಳುಹಿಸಿದ್ದರು.
ಅದರ ಆಧಾರದ ಮೇಲೆ KRS ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಘುಪತಿ ಭಟ್ ಅವರು ಪಿ. ಪ್ರಕಾಶ್ ರೆಡ್ಡಿ ಅವರನ್ನು ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ನೇಮಕಾತಿ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರಿಗೆ ಪಿ. ಪ್ರಕಾಶ್ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.
