ಬಳ್ಳಾರಿ, ಆ. 03:: ಬಳ್ಳಾರಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ಸೋಮವಾರ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಲಾಯಿತು.
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ರೈಲ್ವೆ ನಿಲ್ದಾಣ ಎದುರು ಬೆಳಿಗ್ಗೆ 11.30 ಗಂಟೆಗೆ ಆರಂಭವಾದ ಅಹೋರಾತ್ರಿ ಧರಣಿಯು ಮಂಗಳವಾರ ಬೆಳಿಗ್ಗೆ 11 ಗಂಟೆಯವರೆಗೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್ ಕುಮಾರ್ ಮೋಕ ನಾಯ್ಡು ಅವರು ಜಿಲ್ಲೆಯಾದ್ಯಂತ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಒಣಗಿ ಹೋಗುತ್ತಿದ್ದು, ಕೃಷಿಗೆ ಮಾಡಿದ ಹೂಡಿಕೆ ಸಂಪೂರ್ಣ ನಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಬೆಳೆ ನಷ್ಟದ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಘೋಷಿಸಬೇಕು. ರೈತರ ಬದುಕು ಉಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವೈ.ಎಂ. ಸತೀಶ್, ಸೋಮಲಿಂಗಪ್ಪ, ಸಣ್ಣ ಪಕೀರಪ್ಪ, ಬಿಜೆಪಿ ಬಳ್ಳಾರಿ ನಗರ ಜಿಲ್ಲಾಧ್ಯಕ್ಷ ಗುರಂ ವೆಂಕಟರಮಣ, ಹನುಮಂತಪ್ಪ ಮಹಿಪಾಲ್, ಗುರುಲಿಂಗನಗೌಡ, ಏನಾಥ್ ರೆಡ್ಡಿ, ದರಪ್ಪ ನಾಯಕ್, ತಿಮ್ಮಪ್ಪ, ಗುಡಿಗಂಟಿ ಹನುಮಂತು, ವೀರಶೇಖರ್ ರೆಡ್ಡಿ, ಅಡವಿ ಸ್ವಾಮಿ, ಹಂಪಿ ರಾಮನ, ಸುಗುಣ, ಪುಷ್ಪ ಚಂದ್ರಶೇಖರ್, ಡಾ. ಅರುಣಾ, ಅಲಿವೇಲಮ್ಮ, ಜ್ಯೋತಿ, ಚಾಂದಿನಿ ಸೇರಿದಂತೆ ಬಿಜೆಪಿ ಮುಖಂಡರು, ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.