ಬಳ್ಳಾರಿ, ಜೂ.15: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕದ ವತಿಯಿಂದ ಜೂನ್ 13ರಿಂದ ರಾಜ್ಯಾದ್ಯಂತ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಬಳ್ಳಾರಿಯಲ್ಲಿ ಜೂನ್ 17ರಂದು ಸಂಜೆ 6 ಗಂಟೆಗೆ ಜಾಥಾಗೆ ಚಾಲನೆ ನೀಡಲಾಗುವುದು ಎಂದು ಮಾಜಿ ನಗರಸಭಾ ಅಧ್ಯಕ್ಷ ಬಾಪೂಜಿ ನಗರ್ ಸಿದ್ದಣ್ಣ ತಿಳಿಸಿದರು.
ಅವರು ಇಂದು ಭಾನುವಾರದಂದು
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಪತಿಕ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂನ್ 17ರಂದು ಮಾತಿ ಸರ್ಕಲ್ ಬಳಿಯ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾಗೆ ಚಾಲನೆ ನೀಡಲಾಗುವುದು. ಬಳಿಕ ಮಾತಿ ಸರ್ಕಲ್, ರಾಯಲ್ ಸರ್ಕಲ್ ಮಾರ್ಗವಾಗಿ ಗಾಂಧಿ ಭವನದವರೆಗೆ ಜಾಥಾ ಸಾಗಲಿದ್ದು, ಅಲ್ಲಿ ಬಹಿರಂಗ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿದ್ದು, ಅದನ್ನು ರಕ್ಷಿಸುವುದು ಚುನಾವಣಾ ಆಯೋಗದ ಮೂಲ ಕರ್ತವ್ಯವಾಗಿದೆ. ಆದರೆ, ಪ್ರಸ್ತುತ ಜಾರಿಗೊಳಿಸಲಾಗುತ್ತಿರುವ ಎಸ್ಐಆರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಬಡವರು ಹಾಗೂ ಹಿಂದುಳಿದ ವರ್ಗದ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಅಪಾಯವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆ ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸುವುದರ ಜೊತೆಗೆ, ಹಿಂದೆ ವಿವಾದಕ್ಕೀಡಾದ ಸಿಎಎ ಮತ್ತು ಎನ್ಆರ್ಸಿ ಮಾದರಿಯ ಕ್ರಮಗಳನ್ನು ಪರೋಕ್ಷವಾಗಿ ಜಾರಿಗೆ ತರುವ ಹುನ್ನಾರವಾಗಿದೆ ಎಂದು ಅವರು ಟೀಕಿಸಿದರು. ಈಗಾಗಲೇ ಕೆಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಮತಪಟ್ಟಿಯಿಂದ ಕೈಬಿಡಲ್ಪಟ್ಟಿರುವುದಾಗಿ ಉಲ್ಲೇಖಿಸಿದ ಅವರು, ಕರ್ನಾಟಕದಲ್ಲಿಯೂ ಇಂತಹ ಕ್ರಮಗಳನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ತಾರ್ಕಿಕ ವ್ಯತ್ಯಾಸ (Logical Discrepancy) ಸಾಫ್ಟ್ವೇರ್ ಬಳಕೆಯನ್ನು ಕೈಬಿಡಬೇಕು, ಕರಡು ಪಟ್ಟಿಯನ್ನು ಗ್ರಾಮಸಭೆಗಳಲ್ಲಿ ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಿ ಅಂತಿಮಗೊಳಿಸಬೇಕು ಹಾಗೂ ಆಕ್ಷೇಪಣೆ ಸಲ್ಲಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದ ಅವರು ಮತದಾನದ ಹಕ್ಕನ್ನು ದುರ್ಬಲಗೊಳಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಕರ್ನಾಟಕದ ಜನತೆ ಸಹಿಸುವುದಿಲ್ಲ. ಚುನಾವಣಾ ಆಯೋಗವು ನಾಗರಿಕ ಸಮಾಜದ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಹಾಗೂ ಜನರ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ ಅವರು, ರಾಜ್ಯದ ಎಲ್ಲ ಪ್ರಜಾಪ್ರಭುತ್ವವಾದಿಗಳು ಮತ್ತು ನಾಡಪ್ರೇಮಿಗಳು ಜಾಥಾ ಹಾಗೂ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರ ಪಿ. ಗಾದೆಪ್ಪ, ಸಂಗನಕಲ್ಲು ವಿಜಯಕುಮಾರ್, ಅಂಝದ್, ಯೆರುಕುಳ ಸ್ವಾಮಿ, ವೀರೇಂದ್ರ, ದಿವಾಕರ್, ವಸಂತ್, ವೀಣಾ ಕುಮಾರಿ, ಅಯೂಬ್, ಅಮೀರ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.