ಇನ್ನು ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.
ಲೋಕಾಯುಕ್ತ ಮುಡಾ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡ ದಿನದಿಂದಲೂ ದೂರುದಾರ ಸ್ನೇಹಮಯಿ ಕೃಷ್ಣರದ್ದು ಒಂದೇ ಅಸಮಾಧಾನ. ಸಮರ್ಪಕ ತನಿಖೆಯಾಗಲ್ಲ, ನಮಗೆ ನ್ಯಾಯ ಸಿಗಲ್ಲ ಅಂತಿದ್ದ ಸ್ನೇಹಮಯಿ ಸಿಬಿಐ ತನಿಖೆಗೆ ಆಗ್ರಹ ಮಾಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರೂ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಈ ವರದಿಯನ್ನೂ ಪರಿಶೀಲಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿರುವ ಹೈಕೋರ್ಟ್ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.