LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾರಿಗೆ ಮುಷ್ಕರದಿಂದ ಪ್ರಯಾಣಿಕರು ಹೈರಾಣ: ಅಲ್ಲಲ್ಲಿ ರಸ್ತೆಗಿಳಿದ ಬಸ್‌; ಖಾಸಗಿ ಟ್ರಾವೆಲರ್ಸ್‌ ದರ್ಬಾರ್‌

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಇಲಾಖೆ ನೌಕರರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರ ಪರಿಣಾಮ ಬಸ್​ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಶಾಲಾ-ಕಾಲೇಜುಗಳು, ಕಚೇರಿಗಳಿಗೆ ದಿನನಿತ್ಯ ಓಡಾಡುವವರು ಬಸ್‌ ಸಿಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ಬೆಳಗಾವಿ, ಸೇರಿ ರಾಜ್ಯದ ಹಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಒಂದು ದಿನ‌ದ ಮಟ್ಟಿಗೆ ತಡೆ ನೀಡಿ ಆದೇಶ ಹೊರಡಿಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವೆ ಸಂಧಾನ ಸಭೆಯ ವಿವರವನ್ನು ಪೀಠದ ಮುಂದೆ ಇಡುವಂತೆ ಸರ್ಕಾರಕ್ಕೆ ಸೋಮವಾರ ಸೂಚನೆ ನೀಡಿತ್ತು. ಇದರ ಹೊರತು ಸಾರಿಗೆ ನಿಗಮಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿವೆ.

ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್​​ಗಳು ಸಂಚರಿಸುತ್ತಿವೆ. ಏರ್​​ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್​ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.

ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್‌ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್‌ಗಳನ್ನ ನೀಡುವಂತೆ ಖಾಸಗಿ ಬಸ್‌ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ. ರಾಜ್ಯಾದ್ಯಂತ 11 ಸಾವಿರ ಬಸ್‌ ಕೇಳಿದ್ದಾರೆ. ಆದರೆ, ಇನ್ನೂ ಅಂತಿಮಗೊಳಿಸಿಲ್ಲ ಎಂದು ಖಾಸಗಿ ಬಸ್‌ ಮಾಲೀಕರ ಸಂದ ನಟರಾಜ್‌ ಶರ್ಮಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬುಧವಾರಕ್ಕೆ ಬಸ್‌ ನೀಡುವಂತೆ ಕೋರಿದ್ದಾರೆ ಎಂದಿರುವುದು ಹೊಸ ಗೊಂದಲ ಸೃಷ್ಟಿಸಿದೆ.

ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ. ಮೈಸೂರು ನಗರದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರು ಸಂಚರಿಸುತ್ತಿರುವುದು ಕಂಡುಬಂತು. ಮುಷ್ಕರದ ಹಿನ್ನೆಲೆ ಮೈಸೂರು ನಗರ ಹಾಗೂ ಗ್ರಾಮಾಂತರ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿವೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಪರಿಣಾಮವಾಗಿ ಬಸ್ ಸಂಚಾರ ಸ್ವಲ್ಪ ಮಟ್ಟಿಗೆ ಅಸ್ತವ್ಯಸ್ತವಾಗಿದೆ.

ಚಾಮರಾಜನಗರದಿಂದ ಮೈಸೂರು, ಗುಂಡ್ಲುಪೇಟೆ, ಬೆಂಗಳೂರು ಕಡೆಗೆ ತೆರಳುವ ಪ್ರಯಾಣಿಕರು ಬಸ್‌ಗಾಗಿ ತಾಸುಗಟ್ಟಲೆ ಕಾದು ಕಾದು ಸುಸ್ತಾದರು. ಚಾಮರಾಜನಗರ ಬಸ್ ನಿಲ್ದಾಣ, ಡಿಪೋಗೆ ಪೊಲೀಸ್ ಭದ್ರತೆ ನೀಡಲಾಗಿದೆ.ಮಕೂರಿನಲ್ಲೂ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬಹುತೇಕ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹಾವೇರಿ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದರು. ಹುಬ್ಬಳ್ಳಿ, ಶಿವಮೊಗ್ಗ ಮತ್ತು ದಾವಣಗೆರೆ ಸೇರಿ ಅಂತರ್‌ಜಿಲ್ಲೆಗಳಿಗೆ ಮಾತ್ರ ಬಸ್​ಗಳು ಸಂಚರಿಸುತ್ತಿದ್ದು, ನಿಲ್ದಾಣಕ್ಕೆ ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಮುಗಿಬೀಳುತ್ತಿದ್ದರು. ತುಮಕೂರಿನಲ್ಲಿ ಬೆಂಗಳೂರಿಗೆ ತೆರಳುವ ಬಸ್​ಗಳಿಲ್ಲದೆ ಪ್ರಯಾಣಿಕರು ನಿಲ್ದಾಣಗಳಿಂದ ವಾಪಸ್ ತೆರಳುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿತ್ತು. ಮುಷ್ಕರದ ಮಾಹಿತಿ ಇಲ್ಲದ ಕೆಲವು ವಾಹನಗಳು ಬೆಂಗಳೂರಿನತ್ತ ತೆರಳುತ್ತಿದ್ದವು. ಮುಷ್ಕರದ ಮಾಹಿತಿ ಇರುವ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋದರು.


ಸವದತ್ತಿ ಯಲ್ಲಮ್ಮನ ಭಕ್ತರಿಗೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿತು. ಶ್ರಾವಣ ಮಂಗಳವಾರ ಯಲ್ಲಮ್ಮನ ದರ್ಶನಕ್ಕೆ ಹೊರಟ ಭಕ್ತರು ಬಸ್​ಗಳಿಲ್ಲದೆ ಪರದಾಡಿದರು. ಅಂತರ್‌ಜಿಲ್ಲಾ ಬಸ್ ಚಾಲಕರು ಹುಬ್ಬಳ್ಳಿವರೆಗೆ ಮಾತ್ರ ಬಸ್ ಬಿಡುತ್ತೇವೆ. ಮುಂದೆ ಸವದತ್ತಿಗೆ ಹೇಗೆ ಹೋಗುತ್ತೀರಿ? ಅಂತ ಚಾಲಕ ತಿಳಿಹೇಳಿದರೂ ಸಹ ಪ್ರಯಾಣಿಕರು ದೇವರ ಮೇಲೆ ಭಾರ ಹಾಕಿ ಬಸ್ ಏರುತ್ತಿದ್ದರು.


ಹುಬ್ಬಳ್ಳಿಗೆ ಬಸ್ ಬಿಡುವಂತೆ ಪ್ರಯಾಣಿಕರು ಒತ್ತಾಯಿಸಿದರು. ಬಸ್ ಹೋಗುವುದಿಲ್ಲ, ಕೆಳಗಿಳೀರಿ ಎಂದು ಮಹಿಳಾ ಕಂಡಕ್ಟರ್‌ವೊಬ್ಬರು ಹೇಳಿದಾಗ ಸಿಟ್ಟಿಗೆದ್ದ ಪ್ರಯಾಣಿಕರು, ಯಾಕೆ ಬಸ್ ಬಿಡುವುದಿಲ್ಲ ಎಂದು ವಾಗ್ವಾದಕ್ಕಿಳಿದರು. ಈ ವೇಳೆ ಸ್ಥಳಕ್ಕೆ ಬಂದ ಕಂಟ್ರೋಲ್‌ ಜೊತೆಗೂ ಪ್ರಯಾಣಿಕರು ಜಗಳ ಮಾಡಿದರು.


ಶಿವಮೊಗ್ಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್​ಗಳು ಮಾತ್ರ ಕಂಡುಬಂದವು. ಡಿಪೋದಲ್ಲಿ ಟ್ರೈನಿ ಡ್ರೈವರ್ಸ್ ಹಾಗೂ ಕಂಡಕ್ಟರ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದಾಗಿ ಸಾಗರ, ಹೊನ್ನಾಳಿ, ಶಿಕಾರಿಪುರ, ಭದ್ರಾವತಿಗೆ ಬಸ್​ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಆದರೆ ಬೆಂಗಳೂರು ಮಾರ್ಗದ ಬಸ್​ಗಳು‌ ಸಿಗದೆ ಪ್ರಯಾಣಿಕರಿದೆ ಸಮಸ್ಯೆಯಾಗಿದೆ. ದಾವಣಗೆರೆ ಕೇಂದ್ರ ನಿಲ್ದಾಣಕ್ಕೆ ಬಸ್​ಗಳು ಬಾರದೇ ನಿಲ್ದಾಣ ಸ್ತಬ್ಧವಾಗಿದೆ. ದೂರದೂರುಗಳಿಗೆ ಪ್ರಯಾಣಿಸಬೇಕಿರುವ ಜನರು ನಿಲ್ದಾಣದಲ್ಲೇ ಕಾಯುತ್ತಿರುವ ದೃಶ್ಯ ಕಂಡುಬಂದವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್