ಬಳ್ಳಾರಿ, ಮೇ 27: ಮತದಾರರ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ದೇಶಾದ್ಯಂತ ಕೋಟ್ಯಾಂತರ ಜನರ ಮತದಾನದ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ, SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ವತಿಯಿಂದ ಮೇ 30ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊದಲ ಹಂತದ ಕರ್ನಾಟಕ ಪ್ರತಿರೋಧ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡರು, ಕೇಂದ್ರ ಚುನಾವಣಾ ಆಯೋಗದ SIR ಪ್ರಕ್ರಿಯೆ ಜನವಿರೋಧಿ ಹಾಗೂ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕ್ರಮವಾಗಿದೆ ಎಂದು ಆರೋಪಿಸಿದರು. ಈಗಾಗಲೇ ಹಲವು ರಾಜ್ಯಗಳಲ್ಲಿ ನಡೆದ ಪರಿಷ್ಕರಣೆಯಲ್ಲಿ ಕೋಟ್ಯಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ದೂರಿದರು.
ಹೊಸ SIR ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ್ತೆ ಹೊಸದಾಗಿ ನೋಂದಣಿ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, 2002ರ ಮತದಾರರ ಪಟ್ಟಿಯ ದಾಖಲೆಗಳು ಅಥವಾ 11 ವಿಧದ ದಾಖಲೆಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಪ್ರಕ್ರಿಯೆಯಿಂದ ವಿವಾಹಿತ ಮಹಿಳೆಯರು, ಅಲೆಮಾರಿ ಸಮುದಾಯಗಳು, ಆದಿವಾಸಿಗಳು, ದಲಿತರು, ಗ್ರಾಮೀಣ ಬಡವರು ಹಾಗೂ ಅಲ್ಪಸಂಖ್ಯಾತರು ಹೆಚ್ಚು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಹೇಳಿದರು.
“ಲಾಜಿಕಲ್ ಡಿಸ್ಕ್ರೆಪೆನ್ಸಿ” ಹೆಸರಿನ ಸಾಫ್ಟ್ವೇರ್ ಬಳಸಿ ಸಣ್ಣಪುಟ್ಟ ಹೆಸರು, ವಿಳಾಸ ಅಥವಾ ದಿನಾಂಕದ ವ್ಯತ್ಯಾಸಗಳನ್ನು ಕಾರಣವನ್ನಾಗಿ ಮಾಡಿ ಮತದಾನದ ಹಕ್ಕು ಕಸಿಯಲಾಗುತ್ತಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಜನರು ಎಲ್ಲಾ ದಾಖಲೆಗಳಿದ್ದರೂ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ. ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
SIR ಪ್ರಕ್ರಿಯೆಯ ನಿಜವಾದ ಉದ್ದೇಶ ನುಸುಳುಕೋರರನ್ನು ಪತ್ತೆಹಚ್ಚುವುದು ಅಲ್ಲ. ವಿರೋಧ ಪಕ್ಷಗಳಿಗೆ ಬೆಂಬಲ ನೀಡುವ ಸಮುದಾಯಗಳ ಮತಗಳನ್ನು ಕಡಿತಗೊಳಿಸಿ ರಾಜಕೀಯ ಲಾಭ ಪಡೆಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, “ಇದು CAA-NRC ಮಾದರಿಯ ಮತ್ತೊಂದು ಅಪಾಯಕಾರಿ ಕ್ರಮ” ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ “ಕರ್ನಾಟಕ ಪ್ರತಿರೋಧ” ಮೂಲಕ ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಸಾಹಿತಿಗಳು, ಚಿಂತಕರು, ಕಲಾವಿದರು, ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಒಕ್ಕೂಟವು SIR ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವುದು, ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಸಾಫ್ಟ್ವೇರ್ ಬಳಕೆಯನ್ನು ನಿಷೇಧಿಸುವುದು, ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವುದು, ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳ ಮೂಲಕ ಸಾರ್ವಜನಿಕ ಪರಿಶೀಲನೆ ನಡೆಸುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮುಂದಿಟ್ಟಿದೆ.
ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಜನರ ಮತದಾನದ ಹಕ್ಕು ರಕ್ಷಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು. ಜೊತೆಗೆ ವಿಶೇಷ ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಎಲ್ಲಾ ಅರ್ಹ ಮತದಾರರಿಗೆ “ಸ್ಮಾರ್ಟ್ ಕಾರ್ಡ್” ನೀಡಬೇಕು ಎಂದು ಒತ್ತಾಯಿಸಿದರು.
“ಕರ್ನಾಟಕ ಪ್ರತಿರೋಧ”ವು ರಾಜ್ಯದ ಪ್ರತಿಯೊಬ್ಬ ನಾಗರಿಕರ ಮತದಾನದ ಹಕ್ಕು ಹಾಗೂ ಬದುಕುವ ಹಕ್ಕು ರಕ್ಷಿಸುವ ಪ್ರಜಾತಾಂತ್ರಿಕ ಹೋರಾಟವಾಗಿದ್ದು, ಎಲ್ಲ ಜವಾಬ್ದಾರಿಯುತ ನಾಗರಿಕರು ಇದರಲ್ಲಿ ಭಾಗವಹಿಸಬೇಕು ಎಂದು ಮುಖಂಡರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಬುಡ ಅಧ್ಯಕ್ಷ ಹುಮನ್ ಖಾನ್, ಸತ್ಯಬಾಬು, ಎಲ್ಮಾರಣ್ಣ, ಶಿವಶಂಕರ್, ಮಾಧವ್ ರೆಡ್ಡಿ, ಕರಿಯಪ್ಪ ಗುಡಿಮನಿ, ಬೋವಿ ಪಾರ್ಟಿಯ ವಿಷ್ಣುವರ್ಧನ್ ಸೇರಿದಂತೆ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
