ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ ಕುಲಕರ್ಣಿ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಆದೇಶ ಪ್ರತಿ, ಸುಪ್ರೀಂ ಕೋರ್ಟ್ ನಲ್ಲಿ ಥಾಮಸ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಗಳನ್ನು ಪತ್ರದೊಂದಿಗೆ ಲಗತ್ತಿಸಿರುವ ಅವರು, ಕೂಡಲೇ ಶಾಸಕ ವಿನಯ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಿ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಅನ್ವಯವಾದ ನಿಯಮ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೂ ಅನ್ವಯಿಸಲಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಕೊರವರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯವು ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಅವರ ಅನರ್ಹತೆ ಜಾರಿಗೆ ಬರಲಿದೆ. ಆದರೆ, ನ್ಯಾಯಾಲಯದ ತೀರ್ಪಿನ ವಿರುದ್ಧ ಎಂಬಂತೆ ಅವರ ಅಭಿಮಾನಿಗಳು ಧಾರವಾಡದಲ್ಲಿ ಶನಿವಾರ ಶಾಸಕ ವಿನಯ ಕುಲಕರ್ಣಿ ಜನಪ್ರಿಯ ಶಾಸಕರು ಎಂದು ನಮೂದಿಸಿ ನ್ಯಾಯಾಂಗದ ಘನತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಸಭಾಧ್ಯಕ್ಷರು ಶಾಸಕ ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಕ್ಷೇತ್ರವನ್ನು ತೆರವುಗೊಳಿಸಲಾಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿನಂತಿಸಿದ್ದಾರೆ.