ಬಾಗಲಕೋಟೆ, ಜುಲೈ ೦೩ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಮಾತನಾಡಿ, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ. ಮತದಾರರ ಜಾಗೃತಿ ಕಾರ್ಯಕ್ರಮಗಳ ಮೂಲಕ ಎಸ್ಐಆರ್ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಮನವಿ ಮಾಡಿದರು.
ಜಾಥಾದಲ್ಲಿ ವಿದ್ಯಾರ್ಥಿಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಬಿಎಲ್ಒಗಳು ಹಾಗೂ ಮತದಾರ ಜಾಗೃತಿ ತಂಡಗಳು ಎಸ್ಐಆರ್ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಪ್ರದರ್ಶಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡುತ್ತ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಸಿದರು. ಸೈಕಲ್ ಜಾಥಾ ವಿದ್ಯಾಗಿರಿ ವೃತ್ತದಿಂದ ಪ್ರಾರಂಭವಾಗಿ ೧೪ನೇ ಕ್ರಾಸ್ ಮೂಲಕ ಕಲಾದಗಿ ಮೇನ್ ರೋಡ, ಅಯೋದ್ಯಾ ಹೋಟಲ್ ಕ್ರಾಸ್, ವಿದ್ಯಾಗಿರಿ ೨೨ನೇ ಕ್ರಾಸ್, ಪಂಜುರ್ಲಿ ಹೋಟಲ್ ಮೂಲಕ ಮರಳಿ ವಿದ್ಯಾಗಿರಿ ಕ್ರಾಸ್ಗೆ ಮುಕ್ತಾಯಗೊಂಡಿತು. ಅಧಿಕಾರಿಗಳು ಸೈಕಲ್ ಏರಿ ಜಾಥಾದಲ್ಲಿ ಸಂಚರಿಸಿದ್ದು, ಎಲ್ಲರ ಗಮನ ಸೆಳೆಯಿತು.
ಜಾಥಾದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿ.ಪಂ ಮುಖ್ಯ ಯೊಜನಾಧಿಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಾಸುದೇವ ಬಡಿಗೇರ, ತಹಶೀಲ್ದಾರ ವಾಸುದೇವ ಸ್ವಾಮಿ, ತಾ.ಪಂ ಇಒ ಸುಭಾಷ ಸಂಪಗಾವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು.