ವಿಜಯನಗರ (ಹೊಸಪೇಟೆ).೦೯: ಜಿಲ್ಲೆಯಲ್ಲಿ ಪ್ರಗತಿ ಕುಂಠಿತಗೊಂಡಿರುವ ೭ನೇ ಸಣ್ಣ ನೀರಾವರಿ ಹಾಗೂ ೨ನೇ ನೀರಿನಾಸರೆ ಗಣತಿಯನ್ನು ಸರ್ಕಾರದ ನಿರ್ದೇಶನದಂತೆ ಜೂನ್ ೧೫ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸೋಮವಾರದಂದು ನಡೆದ ಅಂಕಿ ಸಂಖ್ಯೆ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಹಸಿಲ್ದಾರರೊಂದಿಗೆ ಸೂಕ್ತ ಸಮನ್ವಯ ಸಾಧಿಸಿ, ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಪ್ರಕೃತಿ ವಿಕೋಪ, ಬರಗಾಲ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ಸೌಲಭ್ಯ ಮತ್ತು ಪರಿಹಾರ ಸಿಗಬೇಕಾದರೆ ಬೆಳೆ ಕಟಾವು ಪ್ರಯೋಗ ಅಂಕಿ-ಅಂಶಗಳು ನಿಖರವಾಗಿರಬೇಕು. ತಪ್ಪು ಲೆಕ್ಕಾಚಾರಗಳಿಂದಾಗಿ ಯಾವೊಬ್ಬ ರೈತನಿಗೂ ಅನ್ಯಾಯವಾಗಬಾರದು ಎಂದು ಎಚ್ಚರಿಸಿದರು.
ಜಿಲ್ಲೆಯಾದ್ಯಂತ ಬೆಳೆ ಕಟಾವು ಪ್ರಯೋಗಗಳನ್ನು ನಿಯಮಾನುಸಾರ ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಹಾಯಕ ಕೃಷಿ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿಗಳು ತಮಗೆ ಸಂಬಂಧಿಸಿದ ವಿಮಾ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಜಂಟಿಯಾಗಿ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಬೆಳೆ ಕಟಾವಿನ ಪ್ರಕ್ರಿಯೆಗಾಗಿ ನಿಗದಿಪಡಿಸಲಾಗಿರುವ ತಾಂತ್ರಿಕ ಆಪ್ ನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಬೆಳೆ ಕಟಾವು ನಡೆಯುವ ಸಮಯದಲ್ಲಿ ಸಂಬಂಧಪಟ್ಟ ವಿಮಾ ಕಂಪನಿಯ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಇದರೊಂದಿಗೆ, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನಮೂನೆ ೧ ಮತ್ತು ೨ರ ದಾಖಲೀಕರಣ ಕೂಡಲೇ ಪೂರ್ಣಗೊಳಿಸಬೇಕು. ರೈತರ ಬೆಳೆ ವಿಮೆ ಪ್ರಕ್ರಿಯೆಗೆ ಪೂರಕವಾಗಿರುವುದರಿಂದ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್. ಕೆ.ಪತ್ರಿಬಸಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ಶ್ರೀಹರ್ಷ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಭುರಾಜ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.