ಬಳ್ಳಾರಿ, ಏ.28:.. ಡಿಲಿಮಿಟೇಶನ್ಗೆ ಮಾತ್ರ ವಿರೋಧವಿದ್ದು ಶೇ.33 ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ನ ಸಂಪೂರ್ಣ ಬೆಂಬಲವಿದೆ ಎಂದು ಸಂಡೂರು ಶಾಸಕಿ ಅನ್ನಪೂರ್ಣ ತುಕರಾಂ ಅವರು ಸ್ಪಷ್ಟಪಡಿಸಿದರು.
ನಗರದ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಮಹಿಳಾ ಮೀಸಲಾತಿಗೆ ವಿರೋಧಿಗಳಲ್ಲ. ಆದರೆ ಕ್ಷೇತ್ರ ಮರು ವಿಂಗಡಣೆ (ಡಿಲಿಮಿಟೇಶನ್) ಜೊತೆ ಅದನ್ನು ಜೋಡಿಸಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಕಾಲದಲ್ಲೇ ಜಾರಿಗೆ ತರಲಾಗಿದೆ ಎಂದು ಅವರು ನೆನಪಿಸಿದರು. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ವಿಚಾರದಲ್ಲಿ ಬಿಜೆಪಿ ಹಿಂದೆ ಎಂದಿಗೂ ಒತ್ತಾಯಿಸಿರಲಿಲ್ಲ. ಈಗ ಮಾತ್ರ ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಮುಂದಿಟ್ಟಿದೆ ಎಂದು ಟೀಕಿಸಿದರು.
ಮಹಿಳಾ ಮೀಸಲಾತಿಯನ್ನು ಡಿಲಿಮಿಟೇಶನ್ ಪ್ರಕ್ರಿಯೆಗೆ ಕಟ್ಟಿ ಹಾಕಿರುವುದನ್ನು ಪ್ರಶ್ನಿಸಿದ ಅವರು, ಯಾವುದೇ ವಿಳಂಬವಿಲ್ಲದೆ ನೇರವಾಗಿ ಮಹಿಳಾ ಮೀಸಲಾತಿ ಜಾರಿಗೆ ತರಬೇಕು. ಡಿಲಿಮಿಟೇಶನ್ ಹೆಸರಿನಲ್ಲಿ ಅದನ್ನು ಮುಂದೂಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಉಂಟುಮಾಡಬಹುದು ಎಂದು ಅಭಿಪ್ರಾಯಪಟ್ಟ ಅವರು, ಉತ್ತರ ಭಾರತದಲ್ಲಿ ಲೋಕಸಭಾ ಸ್ಥಾನಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಪಾಲಿಗೆ ಇದು ಹಾನಿಕಾರಕವಾಗಬಹುದು. ನಮ್ಮ ವಿರೋಧವೇ ಇದಕ್ಕೆ ಸಂಬಂಧಿಸಿದುದು, ಮಹಿಳಾ ಮೀಸಲಾತಿಗೆ ಅಲ್ಲ ಎಂದು ಹೇಳಿದರು.
ಬಿಜೆಪಿಯವರು ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅನ್ನು ಮಹಿಳಾ ವಿರೋಧಿಗಳಾಗಿ ತೋರಿಸಿ ಚುನಾವಣೆ ಲಾಭ ಪಡೆಯಲು ಕಾಂಗ್ರೆಸ್ ಮಹಿಳಾ ವಿರೋಧಿ ಎಂದು ಆರೋಪಿಸುತ್ತಿದ್ದಾರೆ ಎಂದರು.
ಇನ್ನೂ 2023ರಲ್ಲಿ ಹೆಚ್ಚಿನ ಮತಗಳೊಂದಿಗೆ ಅಂಗೀಕೃತವಾಗಿರುವ ಮಸೂದೆ ಇನ್ನೂ ಜಾರಿಗೆ ಬರದಿರುವುದನ್ನು ಪ್ರಶ್ನಿಸಿದ ಅವರು, ಕ್ಷೇತ್ರ ಮರು ವಿಂಗಡಣೆಯಿಂದ ಬೇರ್ಪಡಿಸಿ ಮಸೂದೆ ತಂದಿದ್ದರೆ ಯಾರೂ ವಿರೋಧಿಸಿರಲಿಲ್ಲ. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಯಾವತ್ತೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯಡು, ಕಾಂಗ್ರೆಸ್ ನ ಕಮಲಾ ಮರಿಸ್ವಾಮಿ, ಜಿಲ್ಲಾಧ್ಯಕ್ಷೆ ಎಂ.ಎಸ್ ಮಂಜುಳಾ, ಮಹಿಳಾ ಮುಖಂಡರಾದ ಪದ್ಮ, ನಾಗಮಣಿ, ಆಶಾಲತಾ, ಶಮೀಮ್ ಜಕ್ಲಿ, ಕಮಲಾವತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
