ಅಥಣಿ: ಪಟ್ಟಣದ ಜೋಡಿ ಕೆರೆಗಳ ಅಭಿವೃದ್ಧಿ, ಭಾಗೀರಥಿ ನಾಲಾ, ಕುಡಿಯುವ ನೀರು, ಸಿಸಿ ರಸ್ತೆಗಳ ನಿರ್ಮಾಣ, ಬೈಪಾಸ್ ರಸ್ತೆ ನಿರ್ಮಾಣ, ಸುರಕ್ಷತಾ ವಿದ್ಯುತ್ ಸೌಲಭ್ಯ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಸು. 180 ಕೋಟಿ ರೂ. ಅನುದಾನ ತರಲಾಗಿದೆ, ಅಥಣಿ ನಗರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕಾಗಿ ಇನ್ನಷ್ಟು ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಅವರು ಮಂಗಳವಾರ ಇಲ್ಲಿನ ಪುರಸಭೆ ಕಾರ್ಯಾಲಯದಲ್ಲಿ ಅಥಣಿ ಪುರಸಭೆ ಸಭಾ ಭವನದಲ್ಲಿ ಪೌರ ಕಾರ್ಮಿಕರ ವತಿಯಿಂದ ಆಯೋಜಿಸಲಾಗಿದ್ದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಶತಮಾನಗಳ ಇತಿಹಾಸ ಹೊಂದಿರುವ ಅಥಣಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ನಗರಸಭೆಯ ಕಟ್ಟಡ, ಹೆಚ್ಚುವರಿ ಸಿಬ್ಬಂದಿ ಸೇರಿದಂತೆ ಅದರ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕಾಗಿ ಸರ್ಕಾರದಿಂದ ಇನ್ನಷ್ಟು ಅನುದಾನವನ್ನ ತರುವಲ್ಲಿ ಶ್ರಮಿಸುತ್ತೇನೆ, ಪುರಸಭೆ ಆಡಳಿತ ಸದಸ್ಯರು ಪ್ರಾಮಾಣಿಕತೆ ಮತ್ತು ಒಗ್ಗಟ್ಟಿನಿಂದ ಆ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಅಥಣಿಯನ್ನು ಅಭಿವೃದ್ಧಿಪಡಿಸುವಂತೆ ಆಡಳಿತ ಸದಸ್ಯರಿಗೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ಅನೇಕ ಬಾರಿ ಹೋರಾಟಗಳನ್ನು ಮಾಡಿ ತಮ್ಮ ಬೇಡಿಕೆಗಳಿಗೆ ಮನವಿ ಸಲ್ಲಿಸಿದ್ದೀರಿ. ಪೌರಾಡಳಿತ ಸಚಿವರನ್ನ ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿ ಹೊರಗುತ್ತಿಗೆ ನೌಕರರ ನೇರ ಸಂಭಾವನೆಗೆ ಒಳಪಡಿಸುವುದು, ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ಒದಗಿಸುವುದು, ಕಾಯಂಗಗೊಳಿಸಿದ ನೌಕರರ ವೇತನ ವಿಳಂಬ ನೀತಿ ಕುರಿತು ಚರ್ಚಿಸಿ ಅವುಗಳನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಪೌರ ನೌಕರರಿಗೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಹಾಗೂ ಪುರಸಭೆಯ ಸರ್ವ ಸದಸ್ಯರು, ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಪೌರ ನೌಕರರ ಸಂಘದ ಅಧ್ಯಕ್ಷ ಬಸವರಾಜ ಕಾಂಬಳೆ ಸೇರಿದಂತೆ ಪೌರ ನೌಕರರು, ಮುಖಂಡರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಅಶೋಕ ಗುಡಿಮನಿ ಸ್ವಾಗತಿಸಿದರು. ಬಸವರಾಜ ಕಾಂಬಳೆ ವಂದಿಸಿದರು.