ಬಳ್ಳಾರಿ, ಆ.31: ಯುವತಿ ಆಶ್ವಿನಿ ಬಹಿರ್ದೆಸೆಗೆ ಮನೆಯಿಂದ ಹೊರಗೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವುದು ಅತ್ಯಂತ ಪೈಶಾಚಿಕ ಕೃತ್ಯವಾಗಿದೆ ರಾಜ್ಯದಲ್ಲಿ ದಲಿತರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಯುವತಿಯರ ಮೇಲೆ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆರ್. ಗುರುಮೂರ್ತಿ ಬಣ) ಮಹಿಳಾ ಘಟಕದ ರಾಜ್ಯ ಅಧ್ಯಕ್ಷರಾದ ಶಾಂತ ಗೃಹ ಇಲಾಖೆಯನ್ನು ಆಗ್ರಹಿಸಿದರು.
ಅವರು ಶನಿವಾರದಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆರ್. ಗುರುಮೂರ್ತಿ ಬಣ) ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ,
ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ, ಪುನರ್ವಸತಿ ಹಾಗೂ ಅಗತ್ಯ ಭದ್ರತೆ ಒದಗಿಸಬೇಕು. ರಾಜ್ಯದಲ್ಲಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇತ್ತೀಚಿಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಹಾಳ ಗ್ರಾಮದ ದಲಿತ ಮುಖಂಡ ಭೂಮಾನಂದ ಅವರನ್ನು ಜಾತಿ ಆಧಾರಿತವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಹಾಗೂ ದಾವಣಗೆರೆ ಜಿಲ್ಲೆಯ ಬೆಳ್ಳಾಳಗೆರೆ ಗ್ರಾಮದಲ್ಲಿ ದೇವಾಲಯ ಪ್ರವೇಶಕ್ಕೆ ತೆರಳಿದ್ದ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆ ಸೇರಿದಂತೆ ಕೊಪ್ಪಳ ಜಿಲ್ಲೆಯ ಬೌಚನಹಳ್ಳಿ ಗ್ರಾಮದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ಸೇರಿದಂತೆ ರಾಜ್ಯದ ವಿವಿಧೆಡೆ ದಲಿತರ ಮೇಲಿನ ದೌರ್ಜನ್ಯಗಳು ನಡೆಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷೆ ಎಂ. ಶಾಂತ, ಮಹಿಳಾ ಘಟಕದ ಬಳ್ಳಾರಿ ಜಿಲ್ಲಾಧ್ಯಕ್ಷೆ ಎಂ.ಪಿ. ಕಮಲ, ಕಾರ್ಯದರ್ಶಿ ಪಿ. ಅಂಜನಿ, ರಾಜ್ಯ ಕಾರ್ಯದರ್ಶಿ ದ್ರಾಕ್ಷಾಯಿಣಿ, ಜಿಲ್ಲಾ ಉಪಾಧ್ಯಕ್ಷರಾದ ಉಮಾದೇವಿ ಹಾಗೂ ಸೀತಮ್ಮ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.