ಬಳ್ಳಾರಿ, ಮೇ 18:..: ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕಡಿತದ ಹಿಂದೆ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರ ಅಡಗಿದೆ ಕರ್ನಾಟಕದಲ್ಲಿ ಎಸ್ಸಿ ಮತ್ತು ಎಸ್ಟಿ ಪಟ್ಟಿಗೆ ಹಲವು ಜಾತಿಗಳನ್ನು ಸೇರಿಸಿದ ಪರಿಣಾಮ ಜನಸಂಖ್ಯೆ ಹೆಚ್ಚಾದರೂ, ಜನಸಂಖ್ಯೆಗೆ ಅನುಗುಣವಾಗಿ ಸಿಗಬೇಕಾದ ಮೀಸಲಾತಿ ದೊರಕಿಲ್ಲ ಇದು ಕಳೆದ 30 ವರ್ಷಗಳಿಂದಲೂ ನಡೆಯುತ್ತಿರುವ ಹೋರಾಟವಾಗಿದ್ದು, 2015ರಲ್ಲಿ Nayaka Students Welfare Federation ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು ಆದರೂ ಇಲ್ಲಿಯವರೆಗೆ ದಲಿತರಿಗೆ ನ್ಯಾಯ ಸಿಕ್ಕಿಲ್ಲ ಕಾಂಗ್ರೆಸ್ ಸರ್ಕಾರ ದಲಿತ ದಲಿತ ಎಂದು ನಮ್ಮ ಮತಗಳನ್ನು ಪಡೆದು ನಮಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಫಾಯಿ ಕರ್ಮಚಾರಿ ಅಧ್ಯಕ್ಷ ಹನುಮಂತಪ್ಪ ಹೇಳಿದರು.
ಅವರು ನಗರದ ಮೋಕಾ ರಸ್ತೆಯಲ್ಲಿರುವ ವಾಜಪೇಯಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ, ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದರು. ನಂತರ ವಾಲ್ಮೀಕಿ ಸಮಾಜದ ಹೋರಾಟದ ಹಿನ್ನೆಲೆ 2019ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗ ರಚಿಸಿತು ಎಂದರು.
2020ರಲ್ಲಿ ಆಯೋಗ ವರದಿ ಸಲ್ಲಿಸಿದ ಬಳಿಕ, 2022ರಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್ಸಿ ಮೀಸಲಾತಿಯನ್ನು 15ರಿಂದ 17 ಶೇಕಡಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು 3ರಿಂದ 7 ಶೇಕಡಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಂಡರು ಎಂದು ಹೇಳಿದರು. ಈ ಕುರಿತು ಸರ್ವಪಕ್ಷ ಸಭೆ ಕರೆದು ಚರ್ಚಿಸಿ, ಕಾನೂನುಬದ್ಧ ರಕ್ಷಣೆ ಒದಗಿಸಲು ಶಾಸನಸಭೆಯಲ್ಲಿ ಮಸೂದೆ ಅಂಗೀಕರಿಸಿ ರಾಜ್ಯಪಾಲರ ಅನುಮೋದನೆಯನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.
ಆದರೆ ಬಳಿಕ ಕಾಂಗ್ರೆಸ್ ನಾಯಕರು ಮೀಸಲಾತಿ ಹೆಚ್ಚಳ ಆಗಿಲ್ಲ ಎಂದು ಜನರಿಗೆ ತಪ್ಪು ಮಾಹಿತಿ ನೀಡಿದರು ಎಂದು ಆರೋಪಿಸಿದರು. 2022ರಿಂದ 2025ರವರೆಗೆ ಸಾವಿರಾರು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಹೆಚ್ಚಿದ ಮೀಸಲಾತಿಯಿಂದ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಪ್ರವೇಶದಲ್ಲಿ ಲಾಭ ಪಡೆದಿದ್ದಾರೆ ಎಂದರು.
2025ರಲ್ಲಿ ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿದಾಗ ಸರ್ಕಾರ ಸಮರ್ಪಕವಾಗಿ ಕೇಸ್ ನಡೆಸಲಿಲ್ಲ ಎಂದು ಟೀಕಿಸಿದ ಅವರು, ಸರ್ಕಾರವೇ ನ್ಯಾಯಾಲಯದ ಮುಂದೆ ಹೆಚ್ಚುವರಿ ಶೇ 6 ಮೀಸಲಾತಿಯನ್ನು ಪಕ್ಕಕ್ಕಿಟ್ಟು ಶೇ 50 ಮಿತಿಯಲ್ಲೇ ಮುಂದುವರಿಯಲು ಅವಕಾಶ ನೀಡುವಂತೆ ಮನವಿ ಮಾಡಿದೆ ಎಂದು ಆರೋಪಿಸಿದರು. ಇದರಿಂದಲೇ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದರು.
ಇದೇ ವೇಳೆ ಬೆಳಗಾವಿ ಅಧಿವೇಶನದಲ್ಲಿ ಶೇ 17ರ ಎಸ್ಸಿ ಮೀಸಲಾತಿಯನ್ನು 6:6:5 ಅನುಪಾತದಲ್ಲಿ ವರ್ಗೀಕರಿಸುವ ಮಸೂದೆ ಅಂಗೀಕರಿಸಲಾಗಿದೆ ಎಂದು ಹೇಳಿದರು. ನಂತರ ಸಚಿವ ಸಂಪುಟ ಸಭೆಗಳಲ್ಲಿ ವಿವಿಧ ಒಳಮೀಸಲಾತಿ ಸೂತ್ರಗಳನ್ನು ಘೋಷಿಸಿರುವುದರಿಂದ ಪರಿಶಿಷ್ಟ ಜಾತಿಗಳಲ್ಲಿ ಗೊಂದಲ ಮತ್ತು ಅಸಮಾಧಾನ ಹೆಚ್ಚಾಗಿದೆ ಎಂದು ಹೇಳಿದರು.
ಶೆಡ್ಯೂಲ್-9 ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ನ ಐ.ಆರ್. ಕೊಯ್ಲೊ ಪ್ರಕರಣದ ತೀರ್ಪಿನ ಬಳಿಕ 9ನೇ ವೇಳಾಪಟ್ಟಿಗೂ ನ್ಯಾಯಾಂಗ ಪರಿಶೀಲನೆ ಅನ್ವಯವಾಗುತ್ತದೆ ಎಂದು ಹೇಳಿದರು. ಹೀಗಾಗಿ ಶೇ 56 ಮೀಸಲಾತಿಯನ್ನು ಉಳಿಸಿಕೊಳ್ಳಲು ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು, ಮೊದಲು ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ಮೊದಲು ಶೇ 56 ಮೀಸಲಾತಿಯನ್ನು ಉಳಿಸಿ, ಎಸ್ಸಿ-ಎಸ್ಟಿ ಸಮುದಾಯಕ್ಕೆ ನ್ಯಾಯ ಒದಗಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಧರಪ್ಪ ನಾಯಕ್, ಅಡವಿ ಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
