ಬಾಗಲಕೋಟೆ, ಜೂನ್ ೨೬ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಜಂಟಿಯಾಗಿ ಚಾಲನೆ ನೀಡಿದರು.
ನಗರದ ಶಕ್ತಿ ಟಾಕೀಜ ಹತ್ತಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್, ಸರಕಾರಿ ಪದವಿ ಪೂರ್ವ ಕಾಲೇಜ ಹಾಗೂ ಸಕ್ರಿ ಪದವಿ ಪೂರ್ವ ಕಾಲೇಜ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು ಮತದಾರರ ಪಟ್ಟಿಯಲ್ಲಿ ವಿಶೇಷ ಪರಿಷ್ಕರಣೆ ಹಾಗೂ ಪ್ಯಾಪಿಂಗ್ ಕಾರ್ಯದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು. ಮತದಾನ ಹಕ್ಕು ಪ್ರಜಾಪ್ರಭುತ್ವದ ಮೂಲ ಅಡಿಪಾಯವಾಗಿದ್ದು, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ನಂತರ ನಡೆದ ಜಾಗೃತಿ ಜಾಥಾ ನಗರದ ಶಕ್ತಿ ಟಾಕೀಸ್ ರಸ್ತೆಯಿಂದ ಪ್ರಾರಂಭವಾಗಿ ಕೆನರಾ ಬ್ಯಾಂಕ್, ಹಳೆ ಸಿಂಡಿಕೇಟ್ ಬ್ಯಾಂಕ್ ಹೊಳೆ ಆಂಜನೇಯ ದೇವಾಸ್ಥಾನ, ಬಸವೇಶ್ವರ ಸರ್ಕಲ್, ಮೆಳ್ಳಿಗೇರಿ ಕಾಂಪ್ಲೇಕ್ಸ್, ಕೆರೂಡಿ ಆಸ್ಪತ್ರೆ, ಲಯನ್ಸ್ ಕ್ಲಬ್, ಸೆಟಲ್ಮೆಂಟರ್ ಏರಿಯಾ ಕಾಲೋನಿ, ಹಳೆ ಐಬಿ ಸರ್ಕಲ್ ಮಾರ್ಗವಾಗಿ ಸಕ್ರಿ ಪದವಿ ಪೂರ್ವ ಕಾಲೇಜಗೆ ಮುಕ್ತಾಯಗೊಂಡಿತು. ಜಾಥಾದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜ ಹಾಗೂ ಸಕ್ರಿ ಪದವಿ ಪೂರ್ವ ಕಾಲೇಜನ ವಿದ್ಯಾರ್ಥಿಗಳು ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಫಲಕಗಳನ್ನು ಪ್ರದರ್ಶಿಸಿದರು.
ಜಾಥಾದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ತಹಶೀಲ್ದಾರ ವಾಸುದೇವ ಸ್ವಾಮಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಹಾಂತೇಶ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗೋಪಾಲ, ಸಕ್ರಿ ಪಿಯು ಕಾಲೇಜಿನ ಪ್ರಾಚಾರ್ಯ ಕಂದಗಲ್ಲ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
