ಬಾಗಲಕೋಟೆ : ಸೆಪ್ಟೆಂಬರ ೧೦ (ಕರ್ನಾಟಕ ವಾರ್ತೆ) : ಬಾದಾಮಿ ತಾಲ್ಲೂಕಿನ ನೀರಬೂದಿಹಾಳ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಗುರುವಾರ ಭೇಟಿ ನೀಡಿ ಶಾಲಾ ಶೈಕ್ಷಣಿಕ ಹಾಗೂ ಮೂಲಸೌಕರ್ಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಯಲ್ಲಿನ ಶೈಕ್ಷಣಿಕ ವ್ಯವಸ್ಥೆ, ವಿದ್ಯಾರ್ಥಿಗಳ ಹಾಜರಾತಿ, ಮೂಲಸೌಕರ್ಯ ಹಾಗೂ ಶಾಲಾ ಪರಿಸರದ ಕುರಿತು ಪರಿಶೀಲನೆ ನಡೆಸಿದರು.
ಶಾಲೆಯಲ್ಲಿನ ಕಲಿಕಾ ವಾತಾವರಣ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳು ಮತ್ತು ಶಾಲಾ ಮುಖ್ಯಸ್ಥರಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದ ಅವರು ಶಾಲಾ ಆವರಣದಲ್ಲಿರುವ ಸಾರ್ವಜನಿಕ ನೀರಿ ಟ್ಯಾಂಕ್ ತೆರವುಗೊಳಿಸಲು ಸೂಚಿಸಿದರು. ಇದರ ಜೊತೆಗೆ ಶಾಲಾ ನೀರಿ ಟ್ಯಾಂಕನ್ನು ಸ್ವಚ್ಚಗೊಳಿಸಲು ಸೂಚನೆ ನೀಡಿದರು.
ಮಕ್ಕಳೊಂದಿಗೆ ಜಿಲ್ಲಾಧಿಕಾರಿ, ಸಿಇಒ ಸಂವಾದ
ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರು ಆತ್ಮೀಯವಾಗಿ ಸಂವಾದ ನಡೆಸಿದರು. ಈ ವೇಳೆ ಮಕ್ಕಳ ಶೈಕ್ಷಣಿಕ ಪ್ರಗತಿ, ಶಾಲೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಕಲಿಕೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅವರ ಆಸಕ್ತಿಯ ವಿಷಯಗಳ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳು ತಮ್ಮ ಶಾಲಾ ಶಿಕ್ಷಣ, ಆಟ-ಕ್ರೀಡೆ, ಗ್ರಂಥಾಲಯ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಅಭಿಪ್ರಾಯ ಹಂಚಿಕೊಂಡರು. ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರು, ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ಭವಿಷ್ಯದಲ್ಲಿ ಉನ್ನತ ಗುರಿ ಸಾಧಿಸುವಂತೆ ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಕೆರೆ ಅಭಿವೃದ್ದಿ ಕಾಮಗಾರಿ ವೀಕ್ಷಣೆ
ಬಳಿಕ ಅಗಸಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರು ಅಮೃತ ಸರೋವರ ಯೋಜನೆಯಡಿ ಮಾಳಗಿ ಕೆರೆಯಲ್ಲಿ ಕೈಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು. ಕೆರೆಯಲ್ಲಿನ ನೀರು ಸಂಗ್ರಹಣಾ ಸಾಮರ್ಥ್ಯ, ಮಳೆ ನೀರು ಸಂಗ್ರಹಣೆ ಹಾಗೂ ಹೆಚ್ಚುವರಿ ನೀರು ಹರಿದುಹೋಗುವ ವ್ಯವಸ್ಥೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುವ ಸಂದರ್ಭದಲ್ಲಿ ಕೆರೆಗೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೆರೆಯಲ್ಲಿ ಸಂಗ್ರಹವಾಗುವ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜೊತೆಗೆ, ಹೆಚ್ಚುವರಿ ನೀರನ್ನು ಸುರಕ್ಷಿತವಾಗಿ ಹೊರಹರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ಕೆರೆಯ ಹೆಚ್ಚುವರಿ ನೀರು ಸುರಕ್ಷಿತವಾಗಿ ಹೊರಹರಿಯಲು ತಡೆಗೋಡೆ ನಿರ್ಮಿಸುವ ಅಗತ್ಯವಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಮಳೆ ನೀರಿನ ಹರಿವನ್ನು ವೈಜ್ಞಾನಿಕವಾಗಿ ನಿಯಂತ್ರಿಸುವ ಮೂಲಕ ಕೆರೆಯ ಸುರಕ್ಷತೆ ಹಾಗೂ ನೀರಿನ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ಹಸಿರೀಕರಣಗೊಳಿಸುವ ನಿಟ್ಟಿನಲ್ಲಿ ಅರಣ್ಯ ಸಸಿಗಳನ್ನು ನೆಡುವುದು ಹಾಗೂ ಮೇವಿನ ಬೆಳೆಗಳನ್ನು ಬೆಳೆಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಭೇಟಿ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು, ಪಂಚಾಯತ ರಾಜ್ ಇಲಾಖೆಯ ಮುಖ್ಯ ಅಭಿಯಂತರ ಆಕಾಶ ವಂದೆ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಸರ್ವಶಿಕ್ಷಣ ಅಭಿಯಾನದ ಡಿವಾಯ್ಪಿಸಿ ಪ್ರಮೋದಿನಿ ಬಳೂಲವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.