ಬಾಗಲಕೋಟೆ, ಮೇ ೧೩ : ನವನಗರದ ಜಿಲ್ಲಾ ಬಾಲಭವನದಲ್ಲಿ ೫ ರಿಂದ ೧೬ ವರ್ಷದ ಮಕ್ಕಳಿಗೆ ಹಮ್ಮಿಕೊಂಡ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳ ಉಚಿತ ಬೇಸಿಗೆ ಶಿಬಿರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ೧೫ ದಿನಗಳ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವುದು, ಆತ್ಮವಿಶ್ವಾಸ ಹೆಚ್ಚಿಸುವುದು ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ೧೫ ದಿನಗಳ ಉಚಿತ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ಮಕ್ಕಳಿಗೆ ಚಿತ್ರಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ ಮತ್ತು ಯೋಗ, ಕರಾಟೆ, ವಿವಿಧ ಚಟುವಟಿಕೆಗಳನ್ನು ಹೇಳಿಕೊಡಲಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಪ್ರಾರಂಭದಲ್ಲಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಬೇಸಿಗೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ೫ ರಿಂದ ೧೬ ವರ್ಷದ ಮಕ್ಕಳಿಗಾಗಿ ಸೃಜನಾತ್ಮಕ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳನ್ನು ಒಳಗೊಂಡ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ, ಸಂಪನ್ಮೂಲ ವ್ಯಕ್ತಿಗಳಾದ ಪದ್ಮಾವತಿ ತಳ್ಳಿಕೇರಿ, ಭವಾನಿ ಕಂಬಾರ, ಸಂಸ್ಕೃತಿ ಕಾಂಬಳೆ ಹಾಗೂ ಇಲಾಖೆಯ ಸುರೇಶ ಹುಲಮನಿ, ಕಮಲಾಕ್ಷಿ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
