ಬಾಗಲಕೋಟೆ: ಜುಲೈ,೧೩ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಬಾಗಲಕೋಟೆ ನಗರದ ಬೂತ ಮಟ್ಟದಲ್ಲಿ ಹಮ್ಮಿಕೊಂಡ ವಿಶೇಷ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರ್ಯಪ್ರಗತಿಯನ್ನು ಪರಿಶೀಲಿಸಿದರು.
ಬಾಗಲಕೋಟೆ ಶಕ್ತಿ ಚಿತ್ರಮಂದಿರದ ಹತ್ತಿರವಿರುವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ ೧೬೧ಕ್ಕೆ ಭೇಟಿ ನೀಡಿ ಮತದಾರರಿಂದ ಭರ್ತಿ ಮಾಡಲಾಗುತ್ತಿದ್ದ ಅರ್ಜಿಗಳ ಸ್ವೀಕಾರ, ದಾಖಲೆಗಳ ಪರಿಶೀಲನೆ, ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಕೈಗೊಂಡಿರುವ ಕಾರ್ಯವೈಖರಿಯನ್ನು ಜಿಲ್ಲಾಧಿಕಾರಿಗಳು ಅವಲೋಕಿಸಿದರು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅರ್ಜಿಗಳನ್ನು ನಿಯಮಾನುಸಾರ ಹಾಗೂ ನಿಖರವಾಗಿ ಪರಿಶೀಲಿಸಿ ಸ್ವೀಕರಿಸುವಂತೆ ಸೂಚನೆ ನೀಡಿದರು.
ಬಾಗಲಕೋಟೆ ನಗರ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿಶೇಷ ಅಭಿಯಾನದ ಪ್ರಯೋಜನವನ್ನು ಪ್ರತಿಯೊಬ್ಬ ಅರ್ಹ ಮತದಾರರು ಪಡೆದುಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಸೇರ್ಪಡೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪರಿಶೀಲನೆ ವೇಳೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮತಗಟ್ಟೆ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಇತರೆ ಸಿಬ್ಬಂದಿಗಳು ಇದ್ದರು.
ಶಿರೂರಿನ ಸರಕಾರಿ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಹಾಗೂ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ನೀಡಿ ಶಾಲೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲ್ಲದೇ ಗ್ರಾಮದಲ್ಲಿ ಸಂಚರಿಸಿ ಸ್ವಚ್ಚತೆಯ ಬಗ್ಗೆ ಪರಿಶೀಲಿಸಿದರು.
