ಮಹಾಲಿಂಗಪುರ:ಮಾಜಿ ಸಚಿವರಾದ ಬಿ. ಜಮೀರ್ ಅಹಮದ್ ಖಾನ್ ಅವರಿಗೆ ತಕ್ಷಣವೇ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಮಹಾಲಿಂಗಪುರದಲ್ಲಿ ಮುಸ್ಲಿಂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಜಮೀರ್ ಅಹಮದ್ ಖಾನ್ ಅವರ ಭಾವಚಿತ್ರಗಳನ್ನು ಹಿಡಿದು, ಅವರ ಪರವಾಗಿ ಘೋ?ಣೆಗಳನ್ನು ಕೂಗಿದರು. ನಂತರ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡ ಸಮುದಾಯದ ನೂರಾರು ಮಂದಿ, ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸಂಪುಟದಲ್ಲಿ ಕೂಡಲೇ ಸ್ಥಾನ ಕಲ್ಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಬೃಹತ್ ಪ್ರತಿಭಟನೆಯನ್ನು ’ಮಹಮ್ಮದೀಯಾ ಅಂಜುಮನ್ ಕಮೀಟಿ’ ಹಾಗೂ ಸಮಸ್ತ ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಮುಸ್ಲಿಂ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಪ್ರಮುಖರು, ಜಮೀರ್ ಅಹಮದ್ ಖಾನ್ ಅವರ ಸೇವಾ ಮನೋಭಾವ ಮತ್ತು ರಾಜಕೀಯ ನಾಯಕತ್ವವನ್ನು ಕೊಂಡಾಡಿದರು. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದಲ್ಲಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
