ವಿಜಯಪುರ,ಜು.೨2: ಐತಿಹಾಸಿಕ ವಿಜಯಪುರದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ೨೦೨೬-೨೭ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ್ಯಾಲಿ ನಗರದಲ್ಲಿ ಸೆಪ್ಟೆಂಬರ್ ೧೦ ರಿಂದ ೨೩ರವರೆಗೆ ನಡೆಯಲಿದ್ದು, ಈ ನೇಮಕಾತಿ ರ್ಯಾಲಿ ಯಶಸ್ವಿಗೊಳಿಸಲು ನಾನಾ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಗ್ನಿಪಥ ನೇಮಕಾತಿ ರ್ಯಾಲಿಯ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸೇನಾ ನೇಮಕಾತಿ ರ್ಯಾಲಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕು ಎಂದರು.
ವಿಜಯಪುರ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ೧೧ ಜಿಲ್ಲೆಗಳ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ಅವಧಿಯಲ್ಲಿ ಪ್ರತಿದಿನ ಅಂದಾಜು ೧೦,೦೦೦ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಅಗ್ನಿವೀರರ ಆಯ್ಕೆ ಪ್ರಕ್ರಿಯೆಯ ರ್ಯಾಲಿಯ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳು ಸೆಪ್ಟೆಂಬರ್ ೧೦ ರಿಂದ ೨೩ರವರೆಗೆ ನಡೆಯಬಹುದಾಗಿದೆ. ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಬೃಹತ್ ನೇಮಕಾತಿ ರ್ಯಾಲಿ ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿಪಥ್ ಆಯ್ಕೆ ಪ್ರಕ್ರಿಯೆಯಲ್ಲಿ ದೈಹಿಕ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನಾ ಪ್ರಕ್ರಿಯೆ ನಡೆಯಲಿವೆ ಎಂದರು.
ಸೇನಾ ನೇಮಕಾತಿ ಅಧಿಕಾರಿಗಳು ತಿಳಿಸಿದಂತೆ, ಈ ಅವಧಿಯಲ್ಲಿ ಬೇಕಾದ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಪ್ರತಿ ದಿನ ಬೆಳಿಗ್ಗೆ ೩ ಗಂಟೆಯಿಂದಲೇ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಳ್ಳುತ್ತದೆ. ಅಂದಾಜು ಹತ್ತು ಸಾವಿರದಷ್ಟು ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೇನಾ ನೇಮಕಾತಿ ವಿಭಾಗದಿಂದ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ನೇಮಕಾತಿ ರ್ಯಾಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಮತ್ತು ಶೆಡ್ ಗಳು ಸೇರಿದಂತೆ ಸಿಂಥೆಟಿಕ್ ಟ್ರ್ಯಾಕ್ ಮತ್ತಿತರೆ ಮೂಲಸೌಕರ್ಯಗಳ ಲಭ್ಯತೆಯು ನೇಮಕಾತಿ ರ್ಯಾಲಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಬಾಸ್ಕೆಟ್ ಬಾಲ್ ಕೋರ್ಟ್ ಬಳಸಿಕೊಳ್ಳಲು ಸೇನಾಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಅಲ್ಲಿ ಶುಚಿತ್ವ ಹಾಗೂ ಸಕಲ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಲನಿರೋಧಕ ಟೆಂಟ್: ರ್ಯಾಲಿ ವೇಳೆ ಅಭ್ಯರ್ಥಿಗಳು ಕಾಯುವ ಅಥವಾ ಮೌಲ್ಯಮಾಪನಕ್ಕೊಳಪಡುವ ಸಾಧ್ಯತೆಯಿರುವುದರಿಂದ ರ್ಯಾಲಿ ಸ್ಥಳದಲ್ಲಿ ಜಲನಿರೋಧಕ ಟೆಂಟ್ ಗಳನ್ನು ಹಾಕಲು ನಿರ್ಧರಿಸಲಾಗಿದ್ದು, ಟೆಂಟ್ ನಲ್ಲಿ ಟೇಬಲ್ ಮತ್ತು ಕುರ್ಚಿ ವ್ಯವಸ್ಥೆ ಮಾಡಬೇಕು ಎಂದರು.
ಬ್ಯಾರಿಕೇಡ್: ರ್ಯಾಲಿ ಪ್ರವೇಶ ನಿಯಂತ್ರಣ, ಜನಸಂದಣಿ ನಿರ್ವಹಣೆ ಮತ್ತು ಓಟದ ಪರೀಕ್ಷೆಯನ್ನು ಸರಾಗವಾಗಿ ನಡೆಸುವ ನಿಟ್ಟಿನಲ್ಲಿ ರ್ಯಾಲಿ ನಡೆಯುವ ಸ್ಥಳದ ಒಳ ಮತ್ತು ಹೊರಗೆ ಬ್ಯಾರಿಕೇಡ್ ಹಾಕಲು ಕ್ರಮ ವಹಿಸಿ, ನೇಮಕಾತಿ ಅಧಿಕಾರಿಗಳು ಹಾಗೂ ಭಾಗವಹಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದರು.
ವೈದ್ಯಕೀಯ ಸೌಲಭ್ಯ: ಪರೀಕ್ಷೆಗೊಳಪಡುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ವೈದ್ಯರು, ನಸಿಂಗ್ ಸಹಾಯಕರು ಮತ್ತು ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲು ಸೂಚಿಸಿದರು.
ವಿದ್ಯುತ್ ಬೆಳಕು: ಕ್ರೀಡಾಂಗಣದಲ್ಲಿ ನೇಮಕಾತಿ ಸುಸೂತ್ರವಾಗಿ ನಡೆಯಬೇಕೆಂಬ ದೂರದೃಷ್ಟಿಯಿಂದ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸಲು ಹೆಸ್ಕಾಂ ಮೇಲ್ವಿಚಾರಕರಿಗೆ ಸೂಚಿಸಿದರು.
ಇಂಟರ್ನೆಟ್ ಸಂಪರ್ಕ: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಅಗತ್ಯವಿರುವ ವಿವಿಧ ವ್ಯವಸ್ಥೆಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಮತ್ತು ಇಂಟರ್ನೆಟ್ ಸಂಪರ್ಕವನ್ನು ಸ್ಥಾಪಿಸಲು ಬಿಎಸ್ಎನ್ಎಲ್ ಪ್ರಬಂಧಕರಿಗೆ ಸೂಚಿಸಿದರು.
ಸಿಸಿಟಿವಿ ಕ್ಯಾಮೆರಾ: ಸ್ಥಳದಲ್ಲಿ ಭದ್ರತೆ, ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಎಲ್ಲರಿಗೂ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ ವ್ಯವಸ್ಥೆ, ವಸತಿ ವ್ಯವಸ್ಥೆ, ಸ್ವಚ್ಛತಾ ವ್ಯವಸ್ಥೆ, ತಾತ್ಕಾಲಿಕ ವಸತಿ ವ್ಯವಸ್ಥೆ, ಸೇನಾ ನೇಮಕಾತಿಗೆ ಅನುಗುಣವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧಗೊಳಿಸುವ ಕಾರ್ಯವನ್ನು ಸ್ಥಳೀಯ ಅಧಿಕಾರಿಗಳು ಕೈಗೊಳ್ಳಬೇಕಾಗಿರುವುದರಿಂದ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳ ಅವಶ್ಯಕತೆ ಹಾಗೂ ಮಾರ್ಗದರ್ಶನದಂತೆ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪವಾಗಬಾರದು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಅಂದಾಜು೧೩ ದಿನಗಳ ಕಾಲ ನಡೆಯುವ ನೇಮಕಾತಿ ರ್ಯಾಲಿಯಲ್ಲಿ ವಿವಿಧ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲು ಯಾವುದೇ ಅನಾನುಕೂಲತೆಯಾಗದ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಕೈಗೊಳ್ಳಲು ಸೂಚಿಸಲಾಯಿತು.
ತಂಡ ರಚನೆಗೆ ಸೂಚನೆ: ವೈದ್ಯಕೀಯ ತಂಡವನ್ನು ಪಾಳಿಯಂತೆ ನೇಮಿಸಬೇಕು. ಜೊತೆಗೆ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗೆ ಕಂದಾಯ, ಶಿಕ್ಷಣ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲು ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಆಯ್ಕೆ ಪ್ರಕ್ರಿಯೆ ನಡೆಯುವ ಅವಧಿಗೆ ಈ ವಿಶೇಷ ತಂಡ ನಿಯೋಜಿಸಬೇಕು ಎಂದರು.
ವಸತಿ ವ್ಯವಸ್ಥೆ ಕಲ್ಪಿಸಲಾಗುವ ಸ್ಥಳ ಹಾಗೂ ಕ್ರೀಡಾಂಗಣದ ಹೊರಾಂಗಣದಲ್ಲಿ ಸ್ವಚ್ಚತೆ ಕೈಗೊಂಡು, ಅಲ್ಲೆಲ್ಲ ಸಿಸಿಟಿವಿ ಅಳವಡಿಸಲು ಹಾಗೂ ಬಯೋ ಟಾಯ್ಲೆಟ್ ವ್ಯವಸ್ಥೆ ಮಾಡಲು ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಂಗಳೂರು ಆರ್ಮಿ ನೇಮಕಾತಿ ವೈದ್ಯಕೀಯ ಅಧಿಕಾರಿ ಡಾ. ಅಭಿಜೀತ್ ಸಿಂಗ್ ಅವರು ಮಾತನಾಡಿ, ಹತ್ತು ಸಾವಿರ ಅಭ್ಯರ್ಥಿಗಳು ಅಗ್ನಿವೀರರ ನೇಮಕಾತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ದಿನಕ್ಕೆ ಅಂದಾಜು ೪೦೦ ರಿಂದ ೬೦೦ ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ದಾಖಲೆಗಳ ಪರಿಶೀಲನೆ ಸಹ ನಡೆಸಲಾಗುವುದು ಅಗತ್ಯ ಸೌಲಭ್ಯಗಳ ಕುರಿತಂತೆ ಮಾಹಿತಿ ನೀಡಿದರು.
ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ೪೦ ಸೇನಾ ಪಡೆಯ ಉನ್ನತ ಅಧಿಕಾರಿಗಳು ಹಾಗೂ ಅವರೊಟ್ಟಿಗೆ ಆಗಮಿಸುವ ೧೫೦ ಜನ ಸಿಬ್ಬಂದಿಗಳಿಗೆ ವಸತಿ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೂ ಊಟದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆಹಾರ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಬಸ್ ವ್ಯವಸ್ಥೆ : ನೇಮಕಾತಿ ರ್ಯಾಲಿಗೆ ಬಸ್ ಹಾಗೂ ರೈಲ್ವೆ ನಿಲ್ದಾಣದಲ್ಲಿ ಬಂದಿಳಿಯುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ನೇಮಕಾತಿ ನಡೆಯುವ ಸ್ಥಳಕ್ಕೆ ಕರೆದೊಯ್ಯಲು ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಅಗ್ನಿಶಾಮಕ ವಾಹನ: ನೇಮಕಾತಿ ರ್ಯಾಲಿ ಆರಂಭದಿಂದ ಹಿಡಿದು ಮುಕ್ತಾಯಗೊಳ್ಳುವವರೆಗೂ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನವನ್ನು ನಿಲ್ಲಿಸುವಂತೆ ಅಗ್ನಿಶಾಮಕ ಠಾಣೆ ಅಧಿಕಾರಿಗೆ ಸೂಚಿಸಿದರು.
ಪೋಲಿಸ್ ಬಂದೋಬಸ್ತ್: ಪ್ರವೇಶ ನಿಯಂತ್ರಣ, ಜನಸಂದಣಿ ನಿರ್ವಹಣೆ ಮತ್ತು ರ್ಯಾಲಿ ಸುಗಮವಾಗಿ ನಡೆಸಲು ನೇಮಕಾತಿ ಸ್ಥಳದ ಒಳ ಮತ್ತು ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಂಗಳೂರು ಆರ್ಮಿ ರೀಕೋಮೆಂಟ್ ನ ಸಹಾಯಕ ಅಧಿಕಾರಿ ಮೇಜರ್ ಸುರೇಂದ್ರನ್ ಪಿ., ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರಿ ಹಾಗೂ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಿರಿಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.