ವಿಜಯನಗರ (ಹೊಸಪೇಟೆ) ಏ.21:
ಜಗತ್ತಿಗೆ ಅದ್ವೈತ ಸಿದ್ಧಾಂತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಬಣ್ಣಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಶಂಕರಾಚಾರ್ಯರು ಕೇವಲ 32 ವರ್ಷಗಳ ಅತ್ಯಲ್ಪ ಜೀವಿತಾವಧಿಯಲ್ಲಿ ಇಡೀ ಭಾರತವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ, ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪವಿತ್ರ ಮಠಗಳನ್ನು ಸ್ಥಾಪಿಸಿದರು. ಈ ಮೂಲಕ ಅವರು ರಾಷ್ಟ್ರೀಯ ಭಾವೈಕ್ಯತೆ ಮತ್ತು ಅಖಂಡತೆಗೆ ಭದ್ರ ಬುನಾದಿ ಹಾಕಿದರು. ಶಂಕರಾಚಾರ್ಯರು ಪ್ರತಿಪಾದಿಸಿದ ಅಹಂ ಬ್ರಹ್ಮಾಸ್ಮಿ ತತ್ವವು ಮನುಷ್ಯರಲ್ಲಿರುವ ದೈವತ್ವವನ್ನು ಜಾಗೃತಗೊಳಿಸುತ್ತದೆ. ಸಮಾಜದಲ್ಲಿನ ಮೇಲು-ಕೀಳು ಎಂಬ ಭಾವ ತೊರೆದು ಸೌಹಾರ್ದಯುತವಾಗಿ ಬಾಳಬೇಕು ಎಂದರು.
ಇಂದಿನ ಯುವ ಪೀಳಿಗೆಯು ಭೌತಿಕ ಸುಖಕ್ಕೆ ಮಾರುಹೋಗದೆ, ಶಂಕರಾಚಾರ್ಯರು ತೋರಿಸಿಕೊಟ್ಟ ಜ್ಞಾನ ಮತ್ತು ವಿವೇಕದ ಹಾದಿಯಲ್ಲಿ ಸಾಗಬೇಕು. ಸಂಸ್ಕಾರಯುತ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಂತಹ ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗಷ್ಟೇ ಸೀಮಿತವಾಗದೆ, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ, ಸಮಾಜದ ಮುಖಂಡರು ಉಪಸ್ಥಿತರಿದ್ದರು.