ಬಾಗಲಕೋಟೆ, ಮೇ ೨೧ : ರಾಷ್ಟ್ರೀಯ ಹೆದ್ದಾರಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸುರಕ್ಷತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸುರಕ್ಷತೆ, ಆಕ್ರಮಣಗಳ ತೆರವು ಹಾಗೂ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ಆದೇಶಗಳ ಅನುಷ್ಠಾನ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಂಟಾಗುವ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಪಕ್ಕದ ಅನಧಿಕೃತ ಆಕ್ರಮಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮಕೈಗೊಳ್ಳಬೇಕು. ಹೆದ್ದಾರಿ ವ್ಯಾಪ್ತಿಯಲ್ಲಿ ಗೊತ್ತುಪಡಿಸಿದ ಬೇ, ಲೇ-ಬೈ ಅಥವಾ ವೇಸೈಡ್ ಸೌಲಭ್ಯವನ್ನು ಹೊರತುಪಡಿಸಿ ನಿಲ್ಲಿಸುವದನ್ನು ತಡೆಯಬೇಕು. ಇದಕ್ಕಾಗಿ ಪೊಲೀಸ್ ಇಲಾಖೆಯ ಜೊತೆಗೆ ಇತರೆ ಇಲಾಖೆಯೊಂದಿಗೆ ಜಂಟಿಯಾಗಿ ತಪಾಸಣೆ ಮತ್ತು ಗಸ್ತು ತಿರುಗುವ ಕೆಲಸವಾಗಬೇಕು. ಅತಿಕ್ರಮಣ ದೂರುಗಳಿಗಾಗಿ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ ೧೦೩೩ ಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಪಘಾತ ವಲಯಗಳ (ಬ್ಲಾಕ್ ಸ್ಪಾಟ್) ಪಟ್ಟಿಯನ್ನು ಪಡೆದುಕೊಂಡು ಸೂಕ್ತ ಸೂಚನಾ ಫಲಕ, ಬೀದಿ ದೀಪ, ವೇತ ನಿಯಂತ್ರಣ ಕ್ರಮ ಹಾಗೂ ರಸ್ತೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ, ಸಾರಿಗೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಹೆದ್ದಾರಿ ಸುರಕ್ಷತಾ ಕ್ರಮಗಳನ್ನು ಅನುಸ್ಠಾನಗೊಳಿಸಲು ಮುಂದಾಗಬೇಕು ಎಂದರು.
ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಪ್ರವೇಶ ಮಾರ್ಗಗಳು, ಅಕ್ರಮ ವಾಣಿಜ್ಯ ಚಟುವಟಿಕೆಗಳು ಹಾಗೂ ವಾಹನ ನಿಲುಗಡೆಯಿಂದ ಅಪಘಾತಗಳ ಸಾಧ್ಯತೆ ಹೆಚ್ಚಿತ್ತಿರುವುದರಿಂದ ಇವುಗಳ ವಿರುದ್ದ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು. ರಸ್ತೆ ಅಪಘಾತಗಳಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಜಾಗೃತಿ ಕಾರ್ಯಕ್ರಮಗಳು, ಸಂಚಾರ ನಿಯಮ ಪಾಲನೆ ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಬಲಪಡಿಸಬೇಕು ಎಂದು ತಿಳಿಸಿದರು.
ಹೆದ್ದಾರಿ ಸುರಕ್ಷತಾ ವಲಯದೊಳಗಿನ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಎನ್.ಎಚ್.ಎ.ಐ, ಪಿಡಬ್ಲೂಡಿ ಪೂರ್ವ ಅನುಮತಿ ಇಲ್ಲದೇ ಸ್ಥಳೀಯ ಸಂಸ್ಥೆಗಳು ಗ್ರಾ.ಪಂಗಳು ಯಾವುದೇ ಪರವಾನಿಗೆ ಎನ್ಓಸಿ ಅಥವಾ ವ್ಯಾಪಾರಕ್ಕೆ ಅನುಮೋದನೆ ನೀಡಬಾರದು. ತುರ್ತಾಗಿ ಜಿಲ್ಲಾ ಹೆದ್ದಾರಿ ಸುರಕ್ಷತಾ ಕಾರ್ಯಪಡೆ ರಚಿಸಿ ಅದರ ಮೂಲಕ ಅತಿಕ್ರಮಣ ತಡೆಯುವ ಕೆಲಸವಾಗಬೇಕು. ಡಬ್ಲೂ.ಎಸ್.ಓಗಳು ಕನಿಷ್ಟ ವಿಶ್ರಾಂತಿ ಪ್ರದೇಶಗಳು, ಆಹಾರ ಸೇವೆ, ಶೌಚಾಲಯ, ಸುರಕ್ಷಿತ ಪಾರ್ಕಿಂಗ್ ವ್ಯವಸ್ಥೆ ಹೊಂದಿರುವದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಪವನ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಸೇರಿದಂತೆ ಇತರೆ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.
