ಮಹಾಲಿಂಗಪುರ,ಅ,೨೫ : : ಈದ್ ಮಿಲಾದ್ ಹಾಗೂ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಹಾಲಿಂಗಪುರ ಪೊಲೀಸ್ ಠಾಣೆಯ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಜಾಥಾ ನಡೆಸಲಾಯಿತು.
ಮಹಾಲಿಂಗಪುರ ಪೊಲೀಸ್ ಠಾಣಾಧಿಕಾರಿ ಕಿರಣ ಸತ್ತಿಗೇರಿ ಅವರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡು ನಗರದ ವಿವಿಧ ಪ್ರಮುಖ ರಸ್ತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹಾಗೂ ಗಸ್ತು ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.
ಈದ್ ಮಿಲಾದ್ ಹಾಗೂ ಗಣೇಶ ಹಬ್ಬಗಳು ಒಂದೇ ಅವಧಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲ, ವದಂತಿ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಸಿಬ್ಬಂದಿಯ ಜಾಥಾ ಸಾಗಿದ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿತು. ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಠಾಣಾಧಿಕಾರಿ ಕಿರಣ ಸತ್ತಿಗೇರಿ ತಿಳಿಸಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆ, ಮೆರವಣಿಗೆ, ಸಂಚಾರ ವ್ಯವಸ್ಥೆ ಸೇರಿದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಧಾರ್ಮಿಕ ಹಬ್ಬಗಳು ಪರಸ್ಪರ ಸಹೋದರತ್ವ, ಭಾವೈಕ್ಯತೆ ಹಾಗೂ ಸೌಹಾರ್ದತೆಯ ಸಂಕೇತವಾಗಬೇಕು ಎಂಬ ಸಂದೇಶವನ್ನು ಪೊಲೀಸ್ ಜಾಥಾ ಸಾರಿತು.