ಬಾಗಲಕೋಟೆ, ಜೂನ್ ೧೨ : ಸಮಾಜದ ಅನಿಷ್ಠ ಪದ್ದತಿಗಳಲ್ಲಿ ಒಂದಾದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮಿಜಿ ಹೇಳಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಜಿಲ್ಲಾ ಮಕ್ಕಳಿ ರಕ್ಷಣಾ ಘಟಕದ ಸಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಗೆ ತೊಡಗಿಸುವುದು ಕಾನೂನು ಬಾಹಿರವಾಗಿದ್ದು, ಬೇರೆ ಮಕ್ಕಳ ಹಾಗೆ ಆಟ, ಪಾಠಗಳಲ್ಲಿ ತೊಡಗಿಸುವ ಮೂಲಕ ಅವರು ಕೂಡಾ ಮುಖ್ಯವಾಹಿನಿಗೆ ಮುಖ್ಯವಾಹಿನಿಗೆ ಬರುವಂತೆ ಮಾಡಬೇಕಿದೆ. ಬಾಲಕಾರ್ಮಿಕತೆಗೆ ಬಡತನ ಮುಖ್ಯ ಕಾರಣವಾಗಿದ್ದು, ಶಿಕ್ಷಣ ಪಡೆಯುವ ಮೂಲಕ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ. ೧೪ ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಕಡ್ಡಾಯವಾಗಿದ್ದು, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಪಡೆಯುವ ಹಕ್ಕು ಇದೆ. ಬಾಲಕಾರ್ಮಿಕತೆಯನ್ನು ತಡೆಗಟ್ಟಲು ಸಮಾಜದ ಎಲ್ಲ ವರ್ಗದವರ ಸಹಕಾರ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರು ಪ್ರಮಾಣ ವಚನ ಬೋಧಿಸಿ ಮಾತನಾಡಿದ ಅವರು ಮಕ್ಕಳು ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರ ಕೈಯಲ್ಲಿ ಪುಸ್ತಕಗಳು ಇರಬೇಕು ಹೊರತು ಉಪಕರಣಗಳಲ್ಲಿ. ಮಕ್ಕಳ ದುಡಿಮೆಗೆ ಮುಖ್ಯವಾಗಿ ಬಡತನ, ಸಾಮಾಜಿಕ ಅಸಮಾನತೆ ಕಾರಣವಾಗಿದ್ದು, ಇದನ್ನು ಹೋಗಲಾಡಿಸಲು ಸರಕಾರ ಮಾತ್ರ ಪರಿಹರಿಸಲು ಸಾದ್ಯವಿಲ್ಲ. ಸಮಾಜದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದ ಅವರು ಬಾಲಕಾರ್ಮಿಕತೆ ನಿರ್ಮೂಲನೆ ಮಾಡಿ ಬಾಲ್ಯವನ್ನು ಸಂರಕ್ಷಿಸುವ ಕೆಲಸವಾಗಬೇಕು ಎಂದರು.
ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾನೂನು ಅಭಿರಕ್ಷಕ ಪಿ.ಎಚ್.ಮಾಳೇದ ಅವರು ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಕಾಯ್ದೆ ೧೯೮೬, ತಿದ್ದುಪಡಿ ಕಾಯ್ದೆ ೨೦೧೬ ಕುರಿತು ವಿವರವಾಗಿ ತಿಳಿಸಿಕೊಟ್ಟರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಗದ್ದಿ ಅವರು ಮಾತನಾಡಿದರು.
ಈ ವೇಳೆ ಬಾಲಕಾರ್ಮಿಕನಾಗಿ ಕೆಲಸ ಮಾಡುತ್ತಿರುವಾಗ ಕೆಲಸದಿಂದ ಬಿಡುಗಡೆಗೊಳಿಸಿ ಶಾಲೆಗೆ ದಾಖಲು ಮಾಡಲಾಗಿತ್ತು. ಸದರಿ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.೮೦.೬೪ ರಷ್ಟು ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದ ಗಣೇಶ ಕಾಂಬಳೆ ವಿದ್ಯಾರ್ಥಿಯನ್ನು ಸನ್ಮಾನಿಸಿ ೨ ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಅದೇ ರೀತಿ ರುಕ್ಮೀಣಿ ಖಾನಾಪೂರ, ಸುದೀಪ ಸಾಲಮಂಟಪಿ, ಸಮಸುದ್ದಿನ್ ಯೂಸುಫ್ ಬಾಲಕರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಕೆಲಸಕ್ಕೆ ಒಟ್ಟುಕೊಂಡ ಮಾಲಿಕರಿಂದ ೨೦ ಸಾವಿರ ರೂ. ಹಾಗೂ ಸರಕಾರದಿಂದ ೧೫ ಸಾವಿರ ರೂ. ಸೇರಿ ಒಟ್ಟು ೩೫ ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ ನಾರಾಯನಕರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹನಮಂತಗೌಡ ಪಾಟೀಲ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾರಕರ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಳೆದ ೨೦೨೫-೨೬ನೇ ಸಾಲಿನಲ್ಲಿ ಅತೀ ಹೆಚ್ಚು ಬಾಲ ಮತ್ತು ಕಿಶೋರಿ ಕಾರ್ಮಿಕರ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾಖಲಿಸಿದ ಬಾಗಲಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕ ರಾಜಶೇಖರ ಕುರಡಿಕೇರಿ ಅವರನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮಿಜಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸನ್ಮಾನಿಸಿದರು.
