ಬಳ್ಳಾರಿ,ಜು.03 ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕ ಮತ್ತು ದೋಷರಹಿತವಾಗಿ ಸಿದ್ಧಪಡಿಸಲು ಭಾರತೀಯ ಚುನಾವಣಾ ಆಯೋಗವು ಹಮ್ಮಿಕೊಂಡಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ' (ಎಸ್ಐಆರ್) ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರು ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)’ ಅಂಗವಾಗಿ ಸ್ವೀಪ್ ಚಟುವಟಿಕೆ ಕುರಿತು ಅರಿವು ಮೂಡಿಸಲು ನಗರದ ಹೊಸ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಅಧಿಕಾರಿಗಳು ಭೇಟಿ ನೀಡಿದಾಗ ಸರಿಯಾದ ಮಾಹಿತಿ ನೀಡಿ, ನಮೂನೆಗಳನ್ನು ಭರ್ತಿ ಮಾಡಿಕೊಡಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರುಗಳ ನಿಖರತೆ ಕಾಪಾಡುವುದು, ಅರ್ಹ ಮತದಾರರ ಹೆಸರು ಸೇರ್ಪಡೆ, ಅನರ್ಹ ಅಥವಾ ಪುನರಾವರ್ತಿತ ಹೆಸರುಗಳ ತಿದ್ದುಪಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು ಎಸ್ಐಆರ್ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಈ ಮನೆ-ಮನೆ ಪರಿಶೀಲನಾ ಅಭಿಯಾನವು ಜುಲೈ 29 ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಯ ನಂತರ ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅಂತಿಮ ಪಟ್ಟಿಯು ಅಕ್ಟೋಬರ್ 7 ರಂದು ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.
ಬೈಕ್ ರ್ಯಾಲಿಯು ಹೊಸ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭಗೊAಡು ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದವರೆಗೆ ನಡೆಯಿತು.
ಈ ವೇಳೆ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಅಬಕಾರಿ ಉಪ ಆಯುಕ್ತ ಮಂಜುನಾಥ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್. ಬಸರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಬೈಕ್ ರೈಡರ್ಸ್ ಭಾಗವಹಿಸಿದ್ದರು.