ಬಾಗಲಕೋಟೆ, ಜುಲೈ ೦೮: ಗ್ರಂಥಾಲಯಗಳ ಅಭಿವೃದ್ದಿ, ಡಿಜಿಟಲ್ ಸೇವೆಗಳ ವಿಸ್ತರಣೆ ಹಾಗೂ ಓದುಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲೇ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಂಥಾಲಯಗಳು ಕೇವಲ ಪುಸ್ತಕ ಓದುವ ಕೇಂದ್ರಗಳಾಗಿರದೇ ಜ್ಞಾನ ಮತ್ತು ಮಾಹಿತಿಯ ಪ್ರಮುಖ ಕೇಂದ್ರಗಳಾಗಿವೆ. ಆದ್ದರಿಂದ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ, ಉತ್ತಮ ಪುಸ್ತಕಗಳ ಲಭ್ಯತೆ ಹಾಗೂ ಡಿಜಿಟಲ್ ಸೇವೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಸೂಚಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯಗಳನ್ನು ಬಳಸುವಂತೆ ಹಾಗೂ ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಲು ವಿಶೇಷ ಕಾರ್ಯಕ್ರಮಗಳು, ಪುಸ್ತಕ ಪ್ರದರ್ಶನ, ಓದು ಅಭಿಯಾನ ಹಾಗೂ ವಿವಿಧ ಸಾಹಿತ್ಯಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿರುವ ಗ್ರಂಥಾಲಯಗಳು ದಿನದ ೨೪ ಗಂಟೆಗಳ ಕಾಲ ಸೇವೆ ನೀಡುವಂತೆ ಆಗಬೇಕು. ಸಾಹಿತ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ಪುಸ್ತಕಗಳನ್ನು ಖರೀದಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತಾತ್ಮಕ ವಿಷಯಗಳು, ಬಜೆಟ್ ವೆಚ್ಚ, ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಿ ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವ್ಯಾಪ್ತಿಯ ವಸತಿ ನಿಲಯಗಳಲ್ಲಿರುವ ಗ್ರಂಥಾಲಯ ಹಾಗೂ ಪ್ರೌಢಶಾಲಾ ಹಾಗೂ ಕಾಲೇಜುಗಳ ಗ್ರಂಥಾಲಯಕ್ಕೆ ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಲು ತಿಳಿಸಿದರು. ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಇರುವ ಗ್ರಂಥಾಲಗಳ ದುರಸ್ಥಿಗೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಯಿತು.
ಬಾಗಲಕೋಟೆಯ ಹಳೆ ಕೋರ್ಟ ಆವರಣದಲ್ಲಿರುವ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವದರಿಂದ ಹೆಚ್ಚುವರಿ ಕೊಠಡಿ ನಿರ್ಮಿಸಿಕೊಳ್ಳಲು ಅನುಮತಿ ನೀಡಲು ಕೋರಲಾಯಿತು. ಮುಧೋಳ ಕವಿ ಚಕ್ರವರ್ತಿ ರನ್ನ ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ, ಸಿಸಿಟಿವಿ ಅಳವಡಿಕೆ ಸೇರಿದಂತೆ ಇತರೆ ಬೇಡಿಕೆಗಳನ್ನು ಸಭೆ ಮುಂದಿಡಲಾಯಿತು.
ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಹಾಜರಾನ್ ಸರಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
