ಬಳ್ಳಾರಿ: 03ಜಿಲ್ಲೆಯ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರವನ್ನು ಸಮರ್ಪಕವಾಗಿ ವಿತರಿಸುವಂತೆ ಆಗ್ರಹಿಸಿ ಹಾಗೂ ಗೊಬ್ಬರ ವಿತರಣೆಯಲ್ಲಿನ ವಿವಿಧ ಸಮಸ್ಯೆಗಳನ್ನು ವಿರೋಧಿಸಿ ಅಖಿಲ ಭಾರತ ಕಿಸಾನ್ ಕೃಷಿ ಮಜ್ದೂರ್ ಸಂಘರ್ಷ ಸಮಿತಿ (AIKKMS) ವತಿಯಿಂದ ಜೂನ್ 4ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಂಘದ ವತಿಯಿಂದ ಮಂಗಳವಾರ ತಾಲೂಕಿನ ಎತ್ತಿನ ಬೂದಿಹಾಳ ಗ್ರಾಮದಲ್ಲಿ ರೈತರ ಸಂಪರ್ಕ ಮತ್ತು ಪ್ರಚಾರ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್, ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರ ಲಭ್ಯವಾಗಬೇಕು. ಆದರೆ ಹಲವೆಡೆ ರೈತರು ಗೊಬ್ಬರಕ್ಕಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಗೊಬ್ಬರ ಪಡೆಯಲು ಎಫ್ಐಡಿ (FID) ಸಂಖ್ಯೆಯನ್ನು ಕಡ್ಡಾಯಗೊಳಿಸಿರುವ ಕ್ರಮದಿಂದ ಅನೇಕ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ತಾಂತ್ರಿಕ ಕಾರಣಗಳು ಹಾಗೂ ದಾಖಲೆಗಳ ಸಮಸ್ಯೆಯಿಂದ ಹಲವರಿಗೆ ಗೊಬ್ಬರ ದೊರೆಯದೆ ಕೃಷಿ ಕಾರ್ಯ ವಿಳಂಬವಾಗುತ್ತಿದೆ. ಆದ್ದರಿಂದ ಈ ಕಡ್ಡಾಯ ನಿಯಮವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಗೊಬ್ಬರ ಖರೀದಿಸುವ ಸಂದರ್ಭದಲ್ಲಿ ಕೆಲವು ಮಾರಾಟ ಕೇಂದ್ರಗಳಲ್ಲಿ ರೈತರಿಗೆ ಅನಗತ್ಯ ಔಷಧಗಳು ಹಾಗೂ ಇತರೆ ಕೃಷಿ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ‘ಲಿಂಕ್ ಮಾರಾಟ’ ಪದ್ಧತಿಯನ್ನು ತಕ್ಷಣ ನಿಲ್ಲಿಸಬೇಕು. ರೈತರಿಗೆ ಬೇಕಾದ ಗೊಬ್ಬರವನ್ನು ಯಾವುದೇ ಷರತ್ತುಗಳಿಲ್ಲದೆ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಜೂನ್ 4ರಂದು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಪ್ರಚಾರ ಕಾರ್ಯಕ್ರಮದಲ್ಲಿ ರೈತರಾದ ಬಸವರಾಜ್, ಹುಲುಗಪ್ಪ, ಮಾಲಿಂಗಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.
