ಬಾಗಲಕೋಟೆ: ಜುಲೈ ೨೯ : ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಬಿವಿವ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕುಮಾರೇಶ್ವರ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನವನಗರದ ಎಸ್.ಬಿ.ಐ ಬ್ಯಾಂಕ್ ಆವರಣದಲ್ಲಿ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಪಿಂಚಣಿದಾರರಿಗೆ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು.
ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಪಿಂಚಣಿದಾರರ ಸಂಘದ ಕಾರ್ಯದರ್ಶಿ ಸಿದ್ದರಾಮ ಮನಹಳ್ಳಿ ಮಾತನಾಡಿ ಹೆಲ್ತ ಇದ್ದಲ್ಲಿ ವೆಲ್ತ ಇರುತ್ತದೆ. ಆದ್ದರಿಂದ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸಬೇಕು. ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದರಿಂದ ಅನೇಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಆರೋಗ್ಯ ತಪಾಸಣೆ ಶಿಬಿರಗಳು ಹಿರಿಯ ನಾಗರಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹಕಾರಿಯಾಗಿವೆ. ಇಂತಹ ಶಿಬಿರ ಆಯೋಜಿಸುವ ಮೂಲಕ ಪಿಂಚಣಿದಾರರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ನವರ ಕಾರ್ಯ ಶ್ಲಾಘನೀಯವಾದುದು ಎಂದರು.
ಆರೋಗ್ಯ ಶಿಬಿರದಲ್ಲಿ ಪಿಂಚಣಿದಾರರಿಗೆ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ, ಹೃದಯ ಸಂಬಂಧಿತ ಪರೀಕ್ಷೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು. ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಿಂಚಣಿದಾರರ ಸಂಘದ ಕಾರ್ಯದರ್ಶಿ ಕುಲಕರ್ಣಿ, ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಗಣೇಶಪ್ಪ ಗೌಡ ಟಿಜಿ, ನವನಗರದ ಶಾಖಾ ವ್ಯವಸ್ಥಾಪಕ ಜನಾರ್ಧನ್ ಕುಲಕರ್ಣಿ ಸೇರಿದಂತೆ ಬ್ಯಾಂಕನ ಎಲ್ಲ ಸಿಬ್ಬಂದಿಗಳು ಉಪಸ್ಥತರಿದ್ದರು.
