ಬಾಗಲಕೋಟೆ, ಜೂನ್ ೧೯ : ಬಾಗಲಕೋಟೆ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ ಸಿಇಓ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯ ಶಂಕರ ಮತ್ತು ಸುಜಾತಾ ದಂಪತಿಗಳ ಮಗನಾದ ಗಜಾನನ ಬಾಲೆ ಅವರು ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ವಿಭಾಗದ ಇಂಜಿನೀಯರಿಂಗ್ ಪದವಿ, ೨೦೨೨ರಲ್ಲಿ ಐ.ಎ.ಎಸ್ ಪಡೆದಿದ್ದಾರೆ. ಪ್ರಾರಂಭದಲ್ಲಿ ರಾಯಚೂರು ಉಪವಿಭಾಗಾಧಿಕಾರಿಯಾಗಿ ನಂತರ ಬಾಗಲಕೋಟೆ ಯುಕೆಪಿಯ ಮಹಾ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸದ್ಯ ಬಾಗಲಕೋಟೆ ಜಿ.ಪಂ ಸಿಇಓ ಹುದ್ದೆಯ ಅಧಿಕಾರ ವಹಿಸಿಕೊಂಡು, ಈ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಯುಕೆಪಿಯ ಮಹಾ ವ್ಯವಸ್ಥಾಪಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. ಸರಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದೊಂದಿಗೆ ಗ್ರಾಮೀಣಾಭಿವೃದ್ದಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಲಾಗುವುದೆಂದು ತಿಳಿಸಿದರು. ಜಿ.ಪಂ ವ್ಯಾಪ್ತಿಯ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಜನಸ್ನೇಹಿ ಆಡಳಿತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಯುಕೆಪಿಯ ಉಪ ಮಹಾ ವ್ಯವಸ್ಥಾಪಕ ಮಹಾದೇವ ಮುರಗಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.