ಮಹಾಲಿಂಗಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯ ವಿ?ಯಗಳ ಓದು-ಬರಹಕ್ಕೆ ಮಾತ್ರ ಸೀಮಿತವಾಗದೆ, ಶಿಕ್ಷಣದ ಜೊತೆಗೆ ಪ್ರತಿದಿನ ಕ್ರೀಡಾ ಚಟುವಟಿಕೆ, ವ್ಯಾಯಾಮ ಹಾಗೂ ಯೋಗಾಭ್ಯಾಸಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕೆಂದು ಮಹಾಲಿಂಗಪುರದ ಮಾಜಿ ಪುರಸಭೆ ಅಧ್ಯಕ್ಷ ಜಿ.ಎಸ್. ಗೊಂಬಿ ಹೇಳಿದರು.
ನಗರದಲ್ಲಿ ನಡೆದ ಕೆಜಿಎಸ್ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ೨೦೨೬-೨೭ನೇ ಸಾಲಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಧುನಿಕ ತಂತ್ರಜ್ಞಾನದ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳು ಹೊರಾಂಗಣ ಕ್ರೀಡೆಗಳಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮೊಬೈಲ್, ಟಿವಿ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯಲ್ಲಿ ಮಕ್ಕಳು ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಅವರ ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿದೆ. ಇದರ ಪರಿಣಾಮವಾಗಿ ಮಕ್ಕಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಬೆಳವಣಿಗೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣದ? ಕ್ರೀಡೆಗೂ ಮಹತ್ವವಿದೆ. ಕ್ರೀಡೆಯಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದರಿಂದ ದೇಹ ಸದೃಢವಾಗುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ಸಮಯಪ್ರಜ್ಞೆ, ಸಹನೆ, ನಾಯಕತ್ವದ ಗುಣ ಹಾಗೂ ತಂಡದ ಮನೋಭಾವ ಬೆಳೆಯುತ್ತದೆ. ಗೆಲುವು-ಸೋಲನ್ನು ಸಮಾನ ಮನಸ್ಸಿನಿಂದ ಸ್ವೀಕರಿಸುವ ಗುಣವೂ ಕ್ರೀಡೆಯಿಂದಲೇ ರೂಢಿಯಾಗುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಶೇ? ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶ ಹಾಗೂ ಮಾರ್ಗದರ್ಶನ ದೊರೆತರೆ ರಾಜ್ಯ ಮತ್ತು ರಾ?ಮಟ್ಟದಲ್ಲಿಯೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸುವುದು ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದಿನನಿತ್ಯದ ಜೀವನದಲ್ಲಿ ಸ್ವಲ್ಪ ಸಮಯವನ್ನು ವ್ಯಾಯಾಮ, ಯೋಗ ಹಾಗೂ ಕ್ರೀಡೆಗೆ ಮೀಸಲಿಡಬೇಕು. ಆರೋಗ್ಯವಂತ ವಿದ್ಯಾರ್ಥಿಗಳಿಂದಲೇ ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಜಿ.ಎಸ್. ಗೊಂಬಿ ಹೇಳಿದರು.
ಈ ಸಂದರ್ಭದಲ್ಲಿ ಸಿ.ಆರ್.ಪಿ. ಎಸ್.ಎಂ. ಮುಗೆನ್ನವರ ಮಾತನಾಡಿ, ಶಾಲಾ ಹಂತದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವ ಉತ್ತಮ ವೇದಿಕೆಯಾಗಿದೆ ಎಂದರು. ಪಠ್ಯ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರೆ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಕ್ರೀಡೆ ವಿದ್ಯಾರ್ಥಿಗಳಲ್ಲಿ ಪರಸ್ಪರ ಸ್ನೇಹ, ಸಹಕಾರ ಹಾಗೂ ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತದೆ. ಕ್ರೀಡಾಕೂಟದಲ್ಲಿ ಗೆಲುವು ಸಾಧಿಸುವುದು ಮಾತ್ರ ಮುಖ್ಯವಲ್ಲ, ಭಾಗವಹಿಸುವ ಮನೋಭಾವವೂ ಅ? ಮುಖ್ಯವಾಗಿದೆ. ಸೋಲನ್ನು ನಿರಾಶೆಯಾಗಿ ಪರಿಗಣಿಸದೆ, ಅದರಿಂದ ಪಾಠ ಕಲಿತು ಮುಂದಿನ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಅಗತ್ಯವಾದ ಮಾರ್ಗದರ್ಶನ ನೀಡಬೇಕು. ಪಾಲಕರು ಸಹ ಮಕ್ಕಳನ್ನು ಕೇವಲ ಅಂಕಗಳ ಆಧಾರದ ಮೇಲೆ ಅಳೆಯದೆ, ಅವರ ಆಸಕ್ತಿ ಮತ್ತು ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು. ಇಂತಹ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಸಹಕಾರಿಯಾಗಲಿವೆ ಎಂದು ಎಸ್.ಎಂ. ಮುಗೆನ್ನವರ ಹೇಳಿದರು.
ಕೆಜಿಎಸ್ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಂಡರು. ಓಟ, ಜಿಗಿತ ಸೇರಿದಂತೆ ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಕರು ಹಾಗೂ ಕ್ರೀಡಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಂ. ಕುರಣಿ, ಸಾಯಿಕಾ ಪೆಂಡಾರಿ, ವಿವೇಕ ಢಪಳಾಪುರ, ಸಂಗಮೇಶ ಮೂತಿರ್ಕಿಹಾಳ, ಮಗದುಮ ಸರ್, ಲಲಿತಾ ಪೂಜಾರಿ, ಗುರು ಪೂಜಾರಿ, ಈರಣ್ಣ ಹಲಗತ್ತಿ, ಧನಂಜಯ ಕುಲಕರ್ಣಿ, ವೈ.ವೈ. ತಂಬೂರಿ, ಸವಿತಾ ಗದಗ, ಚಿತ್ರಗಾರ ಸರ್ ಸೇರಿದಂತೆ ಶಿಕ್ಷಕರು, ಕ್ರೀಡಾ ಶಿಕ್ಷಕರು, ಶಾಲಾ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.