ಬೆಳಗಾವಿ, ಸೆ. ೧೨: ಶತಮಾನಗಳಿಂದ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದ ವೀರಶೈವ ಲಿಂಗಾಯತ ಸಮಾಜವನ್ನು ಸಂಘಟಿಸಿ, ಅಕ್ಷರ ಮತ್ತು ಜ್ಞಾನದ ಬೆಳಕಿನತ್ತ ಕೊಂಡೊಯ್ದು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯವಾಗಿದೆ ಎಂದು ನಿಪ್ಪಾಣಿ ಜಿ.ಐ. ಬಾಗೇವಾಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಮಿಥುನ ಅಂಕಲಿ ಹೇಳಿದರು.
ನಗರದ ಶಿವಬಸವನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಶ್ರೀ ಹಾನಗಲ್ ಕುಮಾರಸ್ವಾಮಿಗಳ ಜೀವನ ಚರಿತ್ರೆ ಕುರಿತು ಅವರು ಉಪನ್ಯಾಸ ನೀಡಿದರುಹಾನಗಲ್ ಕುಮಾರಸ್ವಾಮಿಗಳು ಸಮಾಜದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಪ್ರಗತಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಮಾಜ ಸುಧಾರಕರಾಗಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯನ್ನು ಸ್ಥಾಪಿಸುವ ಮೂಲಕ ಸಮಾಜವನ್ನು ಸಂಘಟಿಸಿ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಗೆ ಹೊಸ ದಿಕ್ಕನ್ನು ನೀಡಿದರು ಎಂದು ಪ್ರೊ. ಮಿಥುನ ಅಂಕಲಿ ತಿಳಿಸಿದರು.ಶಿವಯೋಗ ಮಂದಿರವನ್ನು ಸ್ಥಾಪಿಸಿ ಜ್ಞಾನ ದಾಸೋಹಕ್ಕೆ ಅನುವು ಮಾಡಿಕೊಟ್ಟ ಅವರು, ಸಮಾಜದ ಯುವಜನರಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಕಾರ್ಯಕ್ಕೆ ಬುನಾದಿ ಹಾಕಿದರು. ಮಠ-ಮಂದಿರಗಳ ವ್ಯಾಪ್ತಿಯನ್ನು ಮೀರಿ ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಜ್ಞಾನದ ಅವಕಾಶ ದೊರೆಯಬೇಕು ಎಂಬ ದೂರದೃಷ್ಟಿಯನ್ನು ಹೊಂದಿದ್ದರು ಎಂದು ಹೇಳಿದರು.
ಸಿರಸಂಗಿ ಲಿಂಗರಾಜರು, ಅರಟಾಳ ರುದ್ರಗೌಡರು, ಗಿಲಗಂಚಿ ಗುರುಸಿದ್ಧಪ್ಪನವರಂತಹ ಮಹನೀಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಕುಮಾರಸ್ವಾಮಿಗಳು ಪ್ರಮುಖ ಪಾತ್ರ ವಹಿಸಿದರು. ತಮ್ಮ ಜೀವನದಲ್ಲಿ ಅನೇಕ ಕಷ್ಟ-ಸಂಕಷ್ಟಗಳನ್ನು ಎದುರಿಸಿದರೂ ಅವರು ಎಂದಿಗೂ ಎದೆಗುಂದಲಿಲ್ಲ. ಸಮಾಜದ ಒಳಿತಿಗಾಗಿ ತಮ್ಮ ವೈಯಕ್ತಿಕ ಬದುಕನ್ನೇ ಸಮರ್ಪಿಸಿಕೊಂಡ ಅವರ ಸೇವೆ ಇಂದಿಗೂ ಪ್ರೇರಣಾದಾಯಕವಾಗಿದೆ ಎಂದರು.ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಹಾನಗಲ್ ಕುಮಾರಸ್ವಾಮಿಗಳ ಜೀವನ ಮತ್ತು ಸಮಾಜಸೇವೆಯ ಆದರ್ಶಗಳನ್ನು ಇಂದಿನ ಪೀಳಿಗೆ ಅರಿತುಕೊಂಡು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಸಂಘಟನೆ, ಶಿಕ್ಷಣ ಮತ್ತು ಜಾಗೃತಿಗಾಗಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವುದು ಅವರ ಸ್ಮರಣೆಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮಾತನಾಡಿ, ಹಾನಗಲ್ ಕುಮಾರಸ್ವಾಮಿಗಳು ಸಮಾಜವನ್ನು ಸಂಘಟಿಸುವುದರ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ದೂರದೃಷ್ಟಿಯ ನಾಯಕರು. ಅವರ
ಸಮಾಜಮುಖಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದು ಹೇಳಿದರು. ಪ್ರೇಮಾ ದೇಶನೂರ ವಚನ ಪ್ರಾರ್ಥನೆ ನೆರವೇರಿಸಿದರು. ವಿದ್ಯಾ ಗೌಡರ ಸ್ವಾಗತಿಸಿದರು. ಮಮತಾ ಪಾಟೀಲ ವಚನ ವಿಶ್ಲೇಷಣೆ ಮಾಡಿದರು. ಜ್ಯೋತಿ ಚರಾಟೆ ಅತಿಥಿಗಳನ್ನು ಪರಿಚಯಿಸಿದರು. ರಕ್ಷಾ ನೇಗಿನಹಾಳ ಕಾರ್ಯಕ್ರಮ ನಿರೂಪಿಸಿದರು. ನಂದಾ ಲೋಕನ್ನವರ ವಂದಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಗಣ್ಯರು ಉಪಸ್ಥಿತಿದರು.
****