ಹುನಗುಂದ,ಜು.೦೭: ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಕ್ರಮ ಕಟ್ಟಡ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಧರಣಿ ಹೋರಾಟ ಮಂಗಳವಾರವೂ ಮುಂದುವರಿದಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಗೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಬದಲು, ಕಚೇರಿಯಲ್ಲೇ ಕುಳಿತು ಕಾಗದಪತ್ರಗಳ ಹೊಂದಾಣಿಕೆ ಮಾಡುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ ಎಂದು ಕರವೆ ತಾಲೂಕ ಘಟಕ ಅಧ್ಯಕ್ಷ ರೋಹಿತ್ ಬಾರಕೇರ ಆರೋಪಿಸಿದರು.ಕಟ್ಟಡ ಎತರವಿಗೆ ಕೆಲವು ಹಂತದಲ್ಲಿ ನ್ಯಾಯಾಲಯ ಹಾಗೂ ಮೇಲಾಧಿಕಾರಿಗಳ ಆದೇಶಗಳಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೇ ಸೇಫ್ ಆಗುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು. ಸ್ಥಳಕ್ಕೆ ಬಂದು ವಾಸ್ತವ ಸ್ಥಿತಿ ಅರಿಯುವ ಬದಲು ಕಡತಗಳಲ್ಲೇ ಉತ್ತರ ಹುಡುಕುವ ಕಾರ್ಯ ನಡೆಯುತ್ತಿದೆ ಎಂದು ಧರಣಿ ನಿರತರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಕರಣದಲ್ಲಿ ಕೆಲ ಅಧಿಕಾರಿಗಳು ಮತ್ತು ಸಂಬಂಧಪಟ್ಟ ವ್ಯಕ್ತಿಗಳ ನಡುವೆ ಹೊಂದಾಣಿಕೆ ನಡೆದಿದೆ ಎಂಬ ಅನುಮಾನವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರಿಂದ ಅಕ್ರಮ ಕಟ್ಟಡ ತೆರವು ಕಾರ್ಯ ಉದ್ದೇಶಪೂರ್ವಕವಾಗಿ ವಿಳಂಬವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ಅಧಿಕಾರಿಗಳು ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತ? ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಈ ನಡುವೆ ಅಕ್ರಮ ಕಟ್ಟಡ ತೆರವು ವಿಚಾರ ಅಮೀನಗಡ ಪಟ್ಟಣದಲ್ಲಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳ ಮುಂದಿನ ಕ್ರಮದತ್ತ ನಾಗರಿಕರು ಕಾಯುತಿದ್ದಾರೆ ಎನ್ನಬಹುದಾಗಿದೆ.
