ಕಾಗವಾಡ: ಪಟ್ಟಣದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಶುಕ್ರವಾರ, ಸೆ.18ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಡಳಿತ ಮಂಡಳಿ ಸದಸ್ಯ ಬಿ.ಡಿ. ಪಾಟೀಲ, ಡಿಜಿಟಲ್ ತಂತ್ರಜ್ಞಾನದ ಬಳಕೆಯಿಂದ ಪಾಠಗಳನ್ನು ವಿದ್ಯಾರ್ಥಿಗಳು ಸುಲಭವಾಗಿ ಹಾಗೂ ಪರಿಣಾಮಕಾರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗಲಿದೆ. ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಕಲಿಕೆಗೆ ಸ್ಮಾರ್ಟ್ ಕ್ಲಾಸ್ ಸಹಕಾರಿಯಾಗಲಿದೆ ಎಂದು ಹೇಳಿದರು.
ಸಾಮಾಜಿಕ ಕಾರ್ಯಕರ್ತ ಚಿದಾನಂದ ಅವಟಿ ಹಾಗೂ ಗುರುಗಳಾದ ಎ.ಬಿ. ಶಾಹಾಪುರೆ ಅವರು ಸ್ಮಾರ್ಟ್ ಟಿವಿ ಪರದೆಯನ್ನು ಉದ್ಘಾಟಿಸಿದರು. ಶಾಲೆಗೆ ಸ್ಮಾರ್ಟ್ ಟಿವಿ ಪರದೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ದಾನ ಮಾಡಿದ ಎ.ಬಿ. ಶಾಹಾಪುರೆ ದಂಪತಿಗಳನ್ನು ಇದೇ ಸಂದರ್ಭದಲ್ಲಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮುಖ್ಯ ಅತಿಥಿಗಳು ಮಾತನಾಡಿ, ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಕರೆ ನೀಡಿದರು. ಪ.ಪೂ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಹಾಗೂ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿ.ವಿ. ಸಮಿತಿ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ಕಾಕಾ ಪಾಟೀಲ, ಚಿದಾನಂದ ಅವಟಿ, ಬಿ.ಡಿ. ಪಾಟೀಲ, ಎ.ಬಿ. ಶಾಹಾಪುರೆ, ಸುರೇಶ ಶಿಂದೆ, ದರ್ಶನ ಮಗದುಮ, ಎಂ.ಬಿ. ಪಾಟೀಲ, ಆರ್.ಟಿ. ಗುರುವ, ವಸಂತ ಹವಾಲ್ದಾರ್, ವಿನಾಯಕ ರಾಮದುರ್ಗ, ಸತೀಶ ರತ್ನಾಪ್ಪಗೋಳ, ಡಿ ಧನಗರ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.