ಬಾಗಲಕೋಟೆ, ಜುಲೈ ೨೩: ಜಿಲ್ಲೆಯಲ್ಲಿ ನಡೆಯುತ್ತಿರುವ ವೈದ್ಯಕೀಯ ಕಾಲೇಜಿನ ಹಾಗೂ ಸಂಶೋಧನಾ ಕೇಂದ್ರ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸೀನ್ ಅವರು ಜಿಲ್ಲಾಧಿಕಾರಿ ಸಂಗಪ್ಪ ಅವರೊಂದಿಗೆ ಬುಧವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ರೂಪಿಸಲಾದ ಯೋಜನೆಯ ಮೂಲಕ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಅವರು ಕಾಮಗಾರಿ ನಿಗದಿತ ಅವಧಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕ್ರಮವಹಿಸಲು ತಿಳಿಸಿದರು. ವೈದ್ಯಕೀಯ ಶಿಕ್ಷಣದ ಜೊತೆಗೆ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ಮಿಸುವುದು ಅತ್ಯಂತ ಮಹತ್ವಾಗಿದೆ. ಕಾಮಗಾರಿಯಲ್ಲಿ ಯಾವುದೇ ವಿಳಂಬವಾಗದಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದರು.
ಜಿಲ್ಲಾಧಿಕಾರಿ ಸಂಗಪ್ಪ ಅವರು ಕಾಮಗಾರಿಯ ಪ್ರಸ್ತುತ ಹಂತ, ಇದುವರೆಗೆ ಸಾಧಿಸಿರುವ ಪ್ರಗತಿ ಹಾಗೂ ಬಾಕಿ ಇರುವ ಕೆಲಸಗಳ ಕುರಿತು ಯೋಜನೆಯ ನಕ್ಷೆಯ ಮೂಲಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು. ನಿರ್ಮಾಣ ಕಾರ್ಯವನ್ನು ವೇಗಗೊಳಿಸಿ ಸರ್ಕಾರದ ಗಡುವಿನೊಳಗೆ ಪೂರ್ಣಗೊಳಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದರು. ಪರಿಶೀಲನೆ ವೇಳೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇಗತರೆ ಅಧಿಕಾರಿಗಳು ಇದ್ದರು.