ಬಳ್ಳಾರಿ, ಜು.27:: ನಗರದ ಪ್ರತಿಷ್ಠಿತ ಶ್ರೀ ವಾಸವಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ನ್ನು ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೇಶದ ಗಡಿಗಳನ್ನು ಕಾಯುತ್ತಾ ತಾಯ್ನಾಡಿನ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿ ಶಂಕರ್ ಗೌಡ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೈನಿಕರು ಪ್ರದರ್ಶಿಸಿದ ಅಪ್ರತಿಮ ಶೌರ್ಯ, ಧೈರ್ಯ ಮತ್ತು ಸಾಹಸವನ್ನು ಸ್ಮರಿಸಿದರು. ಮತ್ತೋರ್ವ ಮುಖ್ಯ ಅತಿಥಿ ಕುಮಾರಸ್ವಾಮಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸ್ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ನೆನಪಿಸಿಕೊಳ್ಳುವ ಹಾಗೂ ಅವರ ತ್ಯಾಗದಿಂದ ಸ್ಫೂರ್ತಿ ಪಡೆದು ದೇಶಭಕ್ತಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಮಹತ್ವದ ದಿನವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ದೇಶದ ರಕ್ಷಣೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಾಜಿ ಸೈನಿಕರು ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು, ಧೈರ್ಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತೀಯ ಸೈನಿಕರ ಶೌರ್ಯ ಮತ್ತು ದೇಶಪ್ರೇಮವನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿನಿ ಕು. ಲಿಖಿತ ಸಾಯಿ ವೀರ ಯೋಧರ ತ್ಯಾಗವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪವನ್ನು ತಮ್ಮ ಭಾಷಣದಲ್ಲಿ ವ್ಯಕ್ತಪಡಿಸಿದರು.
ವೀರ ಯೋಧರ ತ್ಯಾಗ ಅಮರವಾಗಲಿ, ಭಾರತ ಮಾತೆಗೆ ಜಯ, ಜೈಹಿಂದ್ ಎಂಬ ಘೋಷಣೆಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ನ ಮಾಜಿ ಅಧ್ಯಕ್ಷ ಅಗಡಿ ಸಿದ್ದೇಶ್ವರ ಪ್ರಸಾದ್, ಕಾರ್ಯದರ್ಶಿ ಪಿ.ಎನ್. ಸುರೇಶ್, ಮುಖ್ಯೋಪಾಧ್ಯಾಯ ವೀರೇಶ್ ಯು., ಶಿಕ್ಷಕ ವೃಂದ, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಮೃತ ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕಿಯರಾದ ಹಂಪಮ್ಮ, ಮಧು ಚೌದ್ರಿ ಹಾಗೂ ನಸೀನ್ ಬೇಗಂ ಕಾರ್ಯಕ್ರಮವನ್ನು ನಿರೂಪಿಸಿದರು.