ಕೊಪ್ಪಳ: ಕುಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭಾರೀ ಭ್ರಷ್ಟಾಚಾರದ ಕುರಿತು ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಮೌನ ವಹಿಸಿರುವ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ದುಂಡಪ್ಪ ಪುರದಿ ಅವರನ್ನು ತಕ್ಷಣವೇ ಎತ್ತಂಗಡಿ ಮಾಡಬೇಕೆಂದು ಆಗ್ರಹಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೈನ್ಯ (ನೋಂದಾಯಿತ) ವತಿಯಿಂದ ಆ repel 31ರಂದು ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಟಿಕ್ಯಾ ನಾಯಕ್ ತಿಳಿಸಿದ್ದಾರೆ.ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೇ ನಂಬರ್ 88ರ ಪಕ್ಕದಲ್ಲಿರುವ ಸರ್ಕಾರಿ ಪರಂಪೋಕು ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಬಡವರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ನಿಯಮಬಾಹಿರವಾಗಿ ಅಕ್ರಮ ಲೇಔಟ್ಗಳನ್ನು ನಿರ್ಮಿಸಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.
ಅಕ್ರಮ ಲೇಔಟ್ಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ನಿವೇಶನ ಪಡೆದ ಫಲಾನುಭವಿಗಳಿಗೆ ಕುಡಿಯುವ ನೀರು, ವಿದ್ಯುತ್, ಒಳಚರಂಡಿ ಹಾಗೂ ರಸ್ತೆ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸದೆ ವಂಚಿಸಲಾಗಿದೆ. ಅಲ್ಲದೆ ಈ ಲೇಔಟ್ಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದಾಖಲೆಗಳನ್ನು ಹಾಜರುಪಡಿಸಿಲ್ಲ ಎಂದು ದೂರಿದರು.
ಹಿಂದೆ ಕಾರ್ಯನಿರ್ವಹಿಸಿದ ಮಾಜಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರು ಸುಮಾರು ₹40 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ ₹12 ಲಕ್ಷಕ್ಕೂ ಅಧಿಕ ಮೊತ್ತದ 15ನೇ ಹಣಕಾಸು ಯೋಜನೆಯ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದು, ಈ ಹಣವನ್ನು ಕೂಡಲೇ ಸರ್ಕಾರಕ್ಕೆ ಮರುಪಾವತಿಸಿಕೊಳ್ಳಬೇಕು. ಗ್ರೇಡ್-2 ಹುದ್ದೆಯಲ್ಲಿದ್ದ ಅಧಿಕಾರಿಗಳು ಅಕ್ರಮ ಲೇಔಟ್ಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಂಚ ಪಡೆದು ವ್ಯಾಪಕ ಅವ್ಯವಹಾರ ಎಸಗಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಿದರೂ ಹಾರಿಕೆ ಉತ್ತರ ನೀಡಲಾಗುತ್ತಿದ್ದು, ಸಾರ್ವಜನಿಕರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಎಲ್ಲಾ ಅಕ್ರಮಗಳನ್ನು ತಡೆಯಲು ವಿಫಲರಾಗಿರುವ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ಪುರದಿ ಅವರನ್ನು ತಕ್ಷಣವೇ ಎತ್ತಂಗಡಿ ಮಾಡಬೇಕು ಹಾಗೂ ಅಕ್ರಮ ಲೇಔಟ್ಗಳನ್ನು ರದ್ದುಗೊಳಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಆ. 31ರ ಸೋಮವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಟಿಕ್ಯಾ ನಾಯಕ್ ಕರೆ ನೀಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಸಂಜಯ ದಾಸ್ ಕೌಜಗೇರಿ, ರಾಮಲಿಂಗಯ್ಯ ಶಾಸ್ತ್ರಿ ಮಠ, ಮಹೇಶ್ ಬಿಚರಳ್ಳಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.