ಬಳ್ಳಾರಿ,ಜೂ.24 : ಪೋಲಿಯೋ ನಿರ್ಮೂಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯ ವಹಿಸುವಂತಿಲ್ಲ. ಗ್ರಾಮೀಣ ಮತ್ತು ನಗರ ಪ್ರದೇಶದ ಪ್ರತಿಯೊಂದು ಮಗುವಿಗೂ ಲಸಿಕೆ ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ಇರುವ ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಬೇಕು. ವಲಸೆ ಕಾರ್ಮಿಕರ ಮಕ್ಕಳು, ಇಟ್ಟಿಗೆ ಭಟ್ಟಿ, ಕಟ್ಟಡ ನಿರ್ಮಾಣ ಪ್ರದೇಶಗಳು ಮತ್ತು ತೋರಣಗಲ್ಲು ಭಾಗದ ಹೈ-ರಿಸ್ಕ್ ಪ್ರದೇಶಗಳಲ್ಲಿನ ಮಕ್ಕಳು ಬಿಟ್ಟುಹೋಗದಂತೆ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಜೂ.27 ರಂದು ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳಿಂದ ಲಸಿಕಾ ಕಾರ್ಯಕ್ರಮದ ಕುರಿತಾಗಿ ಅರಿವು ಜಾಥಾ ಹಮ್ಮಿಕೊಳ್ಳಬೇಕು. ಜೂನ್ 28 ರಂದು ನಿಗದಿಪಡಿಸಿದ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು ಹಾಗೂ ನಂತರದ ದಿನಗಳಲ್ಲಿ ತಂಡಗಳು ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿವೆ. ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚಾರಿ ಲಸಿಕಾ ಕೇಂದ್ರಗಳನ್ನು ನಿಯೋಜಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೈಕ್ ಪ್ರಚಾರ, ಬ್ಯಾನರ್ಗಳು ಮತ್ತು ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ/ಪುರಸಭೆ ಹಾಗೂ ಸಾರಿಗೆ ಇಲಾಖೆಗಳು ಜಂಟಿಯಾಗಿ ಕೆಲಸ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
*ಜಿಲ್ಲೆಯಲ್ಲಿ 1.99 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ:*
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಜೂನ್ 28 ರಿಂದ ಜುಲೈ 1, 2026 ರವರೆಗೆ ಜಿಲ್ಲಾದ್ಯಂತ ವ್ಯಾಪಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಅಭಿಯಾನದಲ್ಲಿ ಜಿಲ್ಲೆಯಾದ್ಯಂತ ಹುಟ್ಟಿನಿಂದ 5 ವರ್ಷದೊಳಗಿನ ಒಟ್ಟು 1,99,703 ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಬೃಹತ್ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.
*ಒಟ್ಟು ಜನಸಂಖ್ಯೆ ಮತ್ತು ಗುರಿ:*
ಜಿಲ್ಲೆಯ ಒಟ್ಟು 16,74,739 ಜನಸಂಖ್ಯೆಯಲ್ಲಿ, 0-5 ವರ್ಷದೊಳಗಿನ 1,99,703 ಮಕ್ಕಳನ್ನು (ನಗರ ಪ್ರದೇಶದಲ್ಲಿ 76,347 ಮತ್ತು ಗ್ರಾಮೀಣ ಪ್ರದೇಶದಲ್ಲಿ 1,23,356) ಗುರುತಿಸಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾದ್ಯಂತ ಒಟ್ಟು 977 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ 657 ಹಾಗೂ ನಗರ ಭಾಗದಲ್ಲಿ 320 ಬೂತ್ಗಳು ಕಾರ್ಯನಿರ್ವಹಿಸಲಿವೆ ಎಂದರು.
ಅಭಿಯಾನದ ಭಾಗವಾಗಿ ಜಿಲ್ಲೆಯ ಒಟ್ಟು 3,49,381 ಮನೆಗಳಿಗೆ ಸಿಬ್ಬಂದಿ ಭೇಟಿ ನೀಡಲಿದ್ದಾರೆ. ಇದರಲ್ಲಿ ನಗರ ಪ್ರದೇಶದ 1,37,502 ಹಾಗೂ ಗ್ರಾಮೀಣ ಪ್ರದೇಶದ 2,11,879 ಮನೆಗಳು ಸೇರಿವೆ. ಗುರುತಿಸಲಾದ ಒಟ್ಟು 335 ಹೈ-ರಿಸ್ಕ್ ಹಾಗೂ ವಲಸೆ ಕಾರ್ಮಿಕರ ಪ್ರದೇಶಗಳಲ್ಲಿ (ನಗರ-131, ಗ್ರಾಮೀಣ-204) ಲಸಿಕೆಯಿಂದ ಯಾವುದೇ ಮಗು ವಂಚಿತವಾಗದAತೆ ನೋಡಿಕೊಳ್ಳಲು 236 ವಿಶೇಷ 'ಮನೆ-ಮನೆ ಭೇಟಿ ತಂಡಗಳನ್ನು' ನಿಯೋಜಿಸಲಾಗಿದೆ.
*ಕಾರ್ಯಪಡೆ ಮತ್ತು ಸಾರಿಗೆ ವ್ಯವಸ್ಥೆ:*
ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲಾದ್ಯಂತ ಬೃಹತ್ ಸಿಬ್ಬಂದಿ ವರ್ಗವನ್ನು ನಿಯೋಜಿಸಲಾಗಿದೆ. 615 ಮನೆ-ಮನೆ ತಂಡಗಳು, 50 ಟ್ರಾನ್ಸಿಟ್ ತಂಡಗಳು ಮತ್ತು 15 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 680 ತಂಡಗಳು ಕಾರ್ಯನಿರ್ವಹಿಸಲಿವೆ. ಲಸಿಕೆ ಹಾಕಲು 1,954 ಲಸಿಕೆದಾರರು ಹಾಗೂ ಅವರ ಮೇಲ್ವಿಚಾರಣೆಗಾಗಿ 188 ಸೂಪರ್ವೈಸರ್ಗಳನ್ನು ನಿಯೋಜಿಸಲಾಗಿದೆ. ಇಡೀ ಕಾರ್ಯಕ್ರಮದ ಉಸ್ತುವಾರಿಗೆ 4 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಇದೇ ವೇಳೆ ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್. ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
