ಜಮಖಂಡಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ಇಂದು ಹೆಚ್ಚುತ್ತಿರುವ ಪರಿಸರ ಮಾಲಿನ್ಯ, ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯಗಳು ಮಾನವ ಕುಲಕ್ಕೆ ಸವಾಲಾಗಿ ಪರಿಣಮಿಸಿದ್ದು, ಇವುಗಳನ್ನು ತಡೆಗಟ್ಟಲು ಪ್ರತಿಯೊಬ್ಬರೂ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಆನಂದ ಪಿ.ಬಿ. ಹೇಳಿದರು.
ತಾಲೂಕಿನ ಹುಲ್ಯಾಳ ಗ್ರಾಮದ ತುಂಗಳ ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗೆ ನೀರು ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಅವರು
ಇನ್ನೋರ್ವ ಮುಖ್ಯ ಅತಿಥಿಯಾದ ಬೀಟ್ ಫಾರೆಸ್ಟರ್ ಈರಣ್ಣ ಪೊನ್ನದ ಅವರು ಮಾತನಾಡಿ, ಅರಣ್ಯ ಮತ್ತು ಪರಿಸರ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಪರಿಸರ ಸಂರಕ್ಷಣೆ ಇಲ್ಲದೆ ಭವಿಷ್ಯದ ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಶಾಲಾ-ಕಾಲೇಜುಗಳ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಪರಿಸರ ಸ್ನೇಹಿ ವಸ್ತುಗಳ ಬಳಕೆ, ಪ್ಲಾಸ್ಟಿಕ್ ತ್ಯಜಿಸುವಿಕೆ ಹಾಗೂ ಪರಿಸರ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಪನ್ಯಾಸ, ಚರ್ಚೆ ಮತ್ತು ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಶಾಲೆಯ ಪ್ರಾಂಶುಪಾಲ ಲಿಂಗರಾಜು ಕೆ. ಎಚ್ ಅವರು ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಪರಿಸರ ಉಳಿದರೆ ಮಾತ್ರ ಮಾನವ ಬದುಕು ಸುರಕ್ಷಿತವಾಗಿರುತ್ತದೆ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು ತಮ್ಮ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು. ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ನಿಯಮಿತವಾಗಿ ನೀರುಣಿಸಿ, ಬೇಲಿ ಹಾಕಿ ಪೋಷಿಸಿದರೆ ಆ ಗಿಡಗಳು ಮುಂದಿನ ದಿನಗಳಲ್ಲಿ ಹೆಮ್ಮರಗಳಾಗಿ ಬೆಳೆದು ಶಾಲಾ ಆವರಣವನ್ನು ಹಸಿರಿನಿಂದ ಕಂಗೊಳಿಸುವಂತೆ ಮಾಡುತ್ತವೆ. ಇದು ಪರಿಸರ ಸಂರಕ್ಷಣೆಯ ಯಶಸ್ವಿ ಮಾದರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಕಾಸ್ ಹಂಚಿನಾಳ ಅವರು ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ಸಮಗ್ರವಾಗಿ ಮಾತನಾಡಿದರು. ಪರಿಸರ ಸಂರಕ್ಷಣೆ ಎಂಬುದು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಮನೆ, ಶಾಲೆ ಹಾಗೂ ಸಮಾಜದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಮಿತವಾಗಿ ಮತ್ತು ಸಮರ್ಪಕವಾಗಿ ಬಳಸುವುದರ ಮೂಲಕ ಪರಿಸರವನ್ನು ಕಾಪಾಡಬಹುದು. ಪರಿಸರ ಸಂರಕ್ಷಣೆ ಇಲ್ಲದಿದ್ದರೆ ಭವಿಷ್ಯದ ಪೀಳಿಗೆಗಳಿಗೆ ಬದುಕುವ ಅವಕಾಶವೇ ಇಲ್ಲದಂತಾಗುತ್ತದೆ ಎಂದು ಹೇಳಿದರು.
ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಮರಗಳನ್ನು ಕಡಿದು ಹಾಕುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಸಂಘಟಿತರಾಗಿ ಪರಿಸರ ರಕ್ಷಣೆಯ ಪರವಾಗಿ ಧ್ವನಿ ಎತ್ತಬೇಕು. ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳ ಮೇಲೆ ಒತ್ತಡ ಹೇರಿ ಪರ್ಯಾಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವಂತೆ ಒತ್ತಾಯಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ವಚ್ಛ ಮತ್ತು ಸುಂದರ ಪರಿಸರ ನಿರ್ಮಾಣವೇ ದೇಶದ ಅಭಿವೃದ್ಧಿಗೆ ಮೂಲಾಧಾರವಾಗಿದೆ. ಇದೇ ಉದ್ದೇಶದಿಂದ ಸ್ವಚ್ಛ ಭಾರತ ಅಭಿಯಾನದಂತಹ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಶಾಲಾ ರಜಾದಿನಗಳಲ್ಲಿ ಸ್ನೇಹಿತರ ಗುಂಪುಗಳನ್ನು ರಚಿಸಿಕೊಂಡು ಗಿಡಗಳನ್ನು ನೆಟ್ಟು, ಅವುಗಳಿಗೆ ನೀರುಣಿಸಿ, ಬೇಲಿ ಹಾಕಿ ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಗೂ ಪರಿಸರ ಜಾಗೃತಿ ಮೂಡಿಸುವ ಪರಿಸರ ಗೀತೆಯನ್ನು ಹಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ವಿವಿಧ ಚಟುವಟಿಕೆಗಳು ಹಾಗೂ ಮರ ನೆಡುವ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ, ವಿದ್ಯಾರ್ಥಿಗಳು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಪರಿಸರ ಜಾಗೃತಿ ಮೂಡಿಸಿ, ವಿವಿಧ ರೀತಿಯ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಶಿಕ್ಷಕ ಹನಮಂತ ಭೂಷಣ್ಣವರ ಸ್ವಾಗತಿಸಿದರು. ವಿದ್ಯಾರ್ಥಿನಿ ಐಶ್ವರ್ಯ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಮಾಹಿಯಾ ನಂದೇಶ್ವರ ವಂದಿಸಿದರು.
