ಕೊಪ್ಪಳ ಸೆಪ್ಟೆಂಬರ್ 17 :ಮಾನಸಿಕ ಸದೃಢತೆಯಿಂದ ಆತ್ಮಹತ್ಯೆ ತಡೆ ಸಾಧ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೀಡಿಯಾ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ "ವಿಶ್ವ ಆತ್ಮಹತ್ಯೆ ತಡೆಗಟ್ಟುವ ಸಪ್ತಾಹ" ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಕ್ತಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿದ್ದರೆ ಆತ್ಮಹತ್ಯೆಯಂತಹ ಯೋಚನೆಗಳು ಬರುವುದಿಲ್ಲ. ಖಿನ್ನತೆ, ಅತಿಯಾದ ಒತ್ತಡ, ಮದ್ಯ ಹಾಗೂ ಮಾದಕವಸ್ತುಗಳಿಗೆ ದಾಸರಾಗುವುದೇ ಆತ್ಮಹತ್ಯೆಗೆ ಪ್ರಮುಖ ಕಾರಣಗಳಾಗಿದ್ದು, ಆಪ್ತ ಸಮಾಲೋಚನೆ, ಉತ್ತಮ ಜೀವನಶೈಲಿ ಮತ್ತು ಅಗತ್ಯವಿದ್ದಲ್ಲಿ ಔಷಧೋಪಚಾರಗಳಿಂದ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರ ಎಸ್. ಸವಡಿ ಅವರು ಮಾತನಾಡಿ, ಜೀವನ ಅತ್ಯಂತ ಅಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಂಡು ಮಾನಸಿಕವಾಗಿ ಸದೃಢರಾಗಬೇಕು ಎಂದರು.
ಜಿಲ್ಲಾ ಕುಷ್ಠರೋಗ ನಿವಾರಣಾ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಹೆಚ್. ಪ್ರಕಾಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, "ಆತ್ಮಹತ್ಯೆಗೆ ಯತ್ನಿಸಿದವರು ಹಾಗೂ ಸಾವಿಗೀಡಾದ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಮುಖ್ಯ. ಸಮಾಜದ ಬೆಂಬಲ ಹಾಗೂ ನಮ್ಮೊಂದಿಗೆ ಯಾರೋ ಒಬ್ಬರಿದ್ದಾರೆ ಎಂಬ ಭರವಸೆಯೇ ಹಲವು ಜೀವಗಳನ್ನು ಉಳಿಸುತ್ತದೆ. ಯಾವುದೇ ಮಾನಸಿಕ ಸಮಸ್ಯೆಗಳಿದ್ದಲ್ಲಿ ಇತರರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಬೇಕು, ಅಗತ್ಯವಿದ್ದಲ್ಲಿ ಆರೋಗ್ಯ ಇಲಾಖೆಯ ಉಚಿತ ಟೋಲ್ ಫ್ರೀ ಸಂಖ್ಯೆ 14416 (Tele-MANAS) ಗೆ ಕರೆ ಮಾಡಿ ಸಕಾಲದಲ್ಲಿ ಆಪ್ತ ಸಮಾಲೋಚನೆ ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ ಎಂ. ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಂದಕುಮಾರ ಹೆಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ. ಗೋನಾಳು ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ. ಶಶಿಧರ ಅಲೂರು, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ವೆಂಕಟೇಶ ಕೆ., ಮೀಡಿಯಾ ಕ್ಲಬ್ ಅಧ್ಯಕ್ಷರಾದ ದೇವು ನಾಗನೂರು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ಮನಃಶಾಸ್ತ್ರಜ್ಞೆ ಪುಷ್ಪಾ ಥೆರೇಸಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.