ಬಳ್ಳಾರಿ:25: ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಾಗೂ ರಾಜಕೀಯ ಆರೋಪಗಳನ್ನು ಖಂಡಿಸಿ, ಸಚಿವರ ಪರ ಬೆಂಬಲ ವ್ಯಕ್ತಪಡಿಸಲು ಕಾಂಗ್ರೆಸ್ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ರ್ಯಾಲಿ ಹಾಗೂ ಪ್ರತಿಭಟನೆ ನಡೆಸಲಾಯಿತು.
ನಗರದ ಇಂದಿರಾ ಗಾಂಧಿ ವೃತ್ತದಿಂದ ಆರಂಭವಾದ ಕಾಂಗ್ರೆಸ್ನ ಬೃಹತ್ ಪಾದಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಚಿವ ಬಿ. ನಾಗೇಂದ್ರ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಹಿಡಿದು ಸಾಗಿದ ಕಾರ್ಯಕರ್ತರು ನಗರದ ಪ್ರಮುಖ ವೃತ್ತ ರಾಯಲ್ ಸರ್ಕಲ್ ನಲ್ಲಿ ಸಚಿವರ ಪರ ಘೋಷಣೆಗಳನ್ನು ಕೂಗಿದರು.
ಪಾದಯಾತ್ರೆ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ತಲುಪಿದ ಬಳಿಕ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಹಾಗೂ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಸಚಿವ ಬಿ. ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ. ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿದ್ದು ರಾಜಕೀಯ ದುರುದ್ದೇಶದಿಂದ ಸಚಿವರನ್ನು ಗುರಿಯಾಗಿಸಿಕೊಂಡು ಪ್ರತಿಭಟನೆ ನಡೆಸಲಾಗುತ್ತಿದ್ದು, ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದರು.
ಬಿ. ನಾಗೇಂದ್ರ ಅವರು ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಕುಗ್ಗಿಸುವ ಉದ್ದೇಶದಿಂದ ಬಿಜೆಪಿ ರಾಜಕೀಯ ಆರೋಪಗಳನ್ನು ಮಾಡುತ್ತಿದೆ, ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ತಿರುಗೇಟು ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಆರೋಪಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಸಚಿವ ಬಿ. ನಾಗೇಂದ್ರ ಅವರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ನಿಲ್ಲಲಿದ್ದಾರೆ ಎಂದು ಸಂದೇಶವನ್ನು ಸಾರಿದರು .
ಅಬ್ಬರಿಸಿದ ಆಂಜನೇಯಲು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಬುಡ ಅಧ್ಯಕ್ಷ ಆಂಜನೇಯಲು ಮಾತನಾಡಿ, ಬಿಜೆಪಿ ನಾಯಕರು ಸಚಿವ ನಾಗೇಂದ್ರ ಅವರ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು ಅವರ ವಿರುದ್ಧ ಈಗಾಗಲೇ ಕ್ಲೀನ್ ಚಿಟ್ ನೀಡಿದ್ದು, ಪದೇ ಪದೇ ಸುಳ್ಳುಗಳನ್ನು ಹೇಳಿ ಸತ್ಯ ಮಾಡಲು ಹೊರಟಿದ್ದಾರೆ, ಈ ರೀತಿಯ ಆಪಾದನೆಗಳು ಬಹಳಷ್ಟು ಜನ ಉಳಿಯುವುದಿಲ್ಲ ನಡೆಯುವುದಿಲ್ಲ, ಈ ಹಿಂದೆ ಅಧಿಕಾರದಲ್ಲಿದ್ದ ಜನಾರ್ದನ್ ರೆಡ್ಡಿ ಗಣಿ ಲೂಟಿ ಮಾಡಿದ್ದಾರೆ ಮತ್ತು ಶ್ರೀರಾಮುಲು ಕೊರೊನ ಅವಧಿಯಲ್ಲಿ ಔಷಧಗಳನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಿದ ಬುಡ ಅಧ್ಯಕ್ಷ ಆಂಜನೇಯಲು ಬಳ್ಳಾರಿ ಬಿಜೆಪಿ ನಾಯಕರು ಇಷ್ಟಕ್ಕೆ ನಿಲ್ಲಿಸದಿದ್ದರೆ ಅವರ ಮನೆಯನ್ನು ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ನಾಯಕರುಗಳ ವಿರುದ್ಧ ಅಬ್ಬರಿಸಿದರು.
ಈ ಪ್ರತಿಭಟನೆಯಲ್ಲಿ ಹುಮಾನ್ ಖಾನ್ ಮಂಜುಳಾ ಬೋಳೆ ಪಾಟಿ ವಿಷ್ಣು, ಈರನಗೌಡ ಹ್ಯಾಳಪಿ ದಿವಾಕರ್ ಗೌಡ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ನಾಯಕರು ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು.