ಬಾಗಲಕೋಟೆ,ಜು,೦೧: ಜಿಲ್ಲೆಯಲ್ಲಿ ಉಂಟಾಗಿರುವ ಮಳೆಯ ಕೊರತೆ ಹಾಗೂ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಮುಂಗಾರು ಮಳೆ ಅವಧಿಯ ಪೂರ್ವಸಿದ್ದತೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರು ಪೂರೈಸಲು ಜಿಲ್ಲೆಯ ಕೆಲವೊಂದು ಕಡೆ ಜುಲೈ ೨೦ ಹಾಗೂ ೨೮ ವರೆಗೆ ನೀರಿನ ಲಭ್ಯತೆ ಇದ್ದು, ತುರ್ತಾಗಿ ಸರಕಾರಿ, ಖಾಸಗಿ ಬೋರವೆಲ್, ಬಾವಿಗಳ ಗುರುತಿಸಿಕೊಂಡು ನಿಭಾಯಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ತಿಳಿಸಿದರು.
ಜಿಲ್ಲೆಯ ಯಾವುದೇ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿ ನೀರಿನ ಮೂಲಗಳ ಸ್ಥಿತಿಯನ್ನು ನಿರಂತರವಾಗಿ ಪರಿಶೀಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಬರಸ್ಥಿತಿ ನಿರ್ವಹಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ೧೨ ಕೋಟಿ ರೂ. ಇದೆ. ಕುಡಿಯುವ ನೀರು ಸೇರಿದಂತೆ ಇತರೆ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳ ಮೊಬೈಲ್ ನಂಬರಿಗೆ ಕರೆ ಮಾಡಿದಲ್ಲಿ ಅವರ ಸಮಸ್ಯೆ ಆಲಿಸಿ ಸಮಜಾಯಿಸಿ ಉತ್ತರ ನೀಡುವ ಕೆಲಸವಾಗಬೇಕು. ಕರೆಗಳನ್ನು ಸ್ವೀಕರಿಸದೇ ಇದ್ದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಬರಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜನರಿಗೆ ಮಾನವೀಯತೆ ದೃಷ್ಠಿಯಿಂದ ನೀರು ಕೊಡುವ ಕೆಲಸವಾಗಬೇಕೆಂದು ತಿಳಿಸಿದರು. ಗ್ರಾಮ ಮಟ್ಟದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪರಿಶೀಲಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಲು ತಿಳಿಸಿದ ಸಚಿವರು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಬೇಜವಾಬ್ದಾರಿ ತೋರುವಂಗಿಲ್ಲ. ಅಧಿಕಾರಿಗಳ ನಿರ್ವಹಣೆಯ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದಾಗಿದೆ ಎಂದರು.
ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮೇವು ದಾಸ್ತಾನು, ಅಗತ್ಯವಿದ್ದರೆ ಮೇವು ಬ್ಯಾಂಕ್ಗಳ ಸ್ಥಾಪನೆ ಹಾಗೂ ಪಶುಸಂಗೋಪನಾ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದರು. ಈಗಾಗಲೇ ರೈತರು ಬಿತ್ತನೆ ಮಾಡಿದ್ದಾರೆ. ಜುಲೈ ೧೫ ರೊಳಗಾಗಿ ಮಳೆಯಾವುದ ಸಾದ್ಯತೆ ಇದೆ ಎಂದು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಳೆಯಾಗದಿದ್ದಲ್ಲಿ ತಾಂತ್ರಿಕ ಮಾಹಿತಿಯೊಂದು ಪರ್ಯಾಯ ಮಾರ್ಗ ತಿಳಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು ತಿಳಿಸಿದರು.
ಸಚಿವರು, ಶಾಸಕರು ಸೇರಿದಂತೆ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಎಲ್ಲ ರೀತಿಯ ಬರಸ್ಥಿತಿ ನಿರ್ವಹಣೆಗೆ ನೀಡಲಾಗುತ್ತದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ತಾಲೂಕಾವಾರು ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಆ ವ್ಯಾಪ್ತಿಯ ಶಾಸಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಉಪಸ್ಥಿತರಿದ್ದ ಜನಪ್ರತಿನಿದಿಗಳು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದ್ದು, ಕೂಡಲೇ ಮೋಡಬಿತ್ತನೆ ಮಾಡಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಜೆ.ಟಿ.ಪಾಟೀಲ, ಸಿದ್ದು ಸವದಿ ಸಚಿವರ ಗಮನಕ್ಕೆ ತಂದಾಗ ಈ ಬಗ್ಗೆ ಗಮನಹರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕರಾದ ಆರ್.ಬಿ.ತಿಮ್ಮಾಪೂರ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಉಮೇಶ ಮೇಟಿ, ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹೀರೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.