ತಾಳಿಕೋಟೆ, ಪಟ್ಟಣದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬರಗಾಲ ಘೋಷಣೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ೧೨ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ಸ್ಥಳಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭೇಟಿ ನೀಡಿ ಹೋರಾಟ ನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಇದೇ ತಿಂಗಳ ೨೧ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಬರಗಾಲ ಘೋಷಣೆ ಕುರಿತು ಸರ್ಕಾರದ ಮೇಲೆ ಒತ್ತಡ ತರುವುದಾಗಿ ತಿಳಿಸಿದರು. ಸರ್ಕಾರ ಬರಗಾಲ ಘೋಷಣೆಯಿಂದ ಹಿಂದೆ ಸರಿದರೆ ಸದನದೊಳಗೆ ಮಾತ್ರವಲ್ಲದೆ, ರೈತರ ಪರವಾಗಿ ಅಹೋರಾತ್ರಿ ಧರಣಿ ನಡೆಸುವುದಾಗಿ ರೈತ ಮುಖಂಡರಿಗೆ ಭರವಸೆ ನೀಡಿದರು.
ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಧರಣಿಯಲ್ಲಿ ಸಂಘಟನೆಯ ಶ್ರೀನಿವಾಸ ಗೋತಗುಣಿಕೆ, ಮಡಿವಾಳಪ್ಪ, ಕಲಬುರಗಿ ಶರಣಗೌಡ ಕೊಡಗಾನೂರ, ಶಿವಾನಂದ ಚಿಂಚೋಳಿ, ರಾಮನಗೌಡ ಯಾಳವಾರ, ಶಾಂತಗೌಡ ಬಿರಾದಾರ, ಜಗನ್ನಾಥ ಮಸರಕಲ್, ಸಂಗಣ್ಣ ಉಪ್ಪನದೊಡ್ಡಿ, ವಿಶ್ವನಾಥ ಹಾದಿಮನಿ, ಶಿವಪ್ಪ ನಾವಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ತಾಳಿಕೋಟೆ ಸೇರಿದಂತೆ ಬರಪೀಡಿತ ತಾಲೂಕುಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.