ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ತನಿಖೆ ಜವಾಬ್ದಾರಿಯನ್ನು ಈ ಆಯೋಗಕ್ಕೆ ವಹಿಸಲಾಗಿತ್ತು. ಆಯೋಗಕ್ಕೆ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ ಮಂಗಳವಾರ ಸಂಜೆಯಿಂದಲೇ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಕಾಮಗಾರಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಆಯೋಗ, ಆಗಸ್ಟ್ 30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನು ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಏಕಾಏಕಿ ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.