ಕಾಂಗ್ರೆಸ್ ನಾಯಕರ ಬಳಿ ಸಮಜಾಯಿಷಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ‘ನಾನು ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿಯೇ ಇಲ್ಲ’ ಎಂದರು. ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿಲ್ಲ. ಕೇವಲ ತನಿಖೆಗೆ ಸೂಚಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದೇವೆ. ರಾಜ್ಯಪಾಲರು ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ. ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು. ಇಲ್ಲಿ ಯಾರೂ ಕೂಡ ಶಾಶ್ವತ ಅಲ್ಲ ಎಂದರು.
ರಾಜ್ಯಪಾಲರ ಪೀಠ ಪವಿತ್ರವಾದದ್ದು. ಅದು ಸಂವಿಧಾನ ರಕ್ಷಿಸುವ ಪೀಠ. ರಾಜ್ಯಪಾಲರ ಕಚೇರಿ ಸರ್ಕಾರವನ್ನು ರಕ್ಷಿಸುವ ಪೀಠವಾಗಿದೆ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ. ಈ ಕಚೇರಿಯಿಂದ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಆಗಬಾರದು. ಹೀಗಾಗಿ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ನಮ್ಮ ಸಚಿವ ಸಂಪುಟದ ವಿಚಾರದ ಬಗ್ಗೆಯೂ ಮನವರಿಕೆ ಮಾಡಿದ್ದೇವೆ. ಎಲ್ಲಾ ವಿಚಾರಗಳಲ್ಲೂ ಪಕ್ಷಾತೀತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.